
ವಡಗೇರಾ: ‘ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಹಾಯಕ ಆಯುಕ್ತ (ವಿಭಾಗೀಯ ಆಯುಕ್ತ) ಹಾಗೂ ತಾಲ್ಲೂಕ ಪಂಚಾಯಿತಿಯ ಆಡಳಿತಾಧಿಕಾರಿ ಶ್ರೀಧರ ಹೇಳಿದರು
ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
‘ಸರ್ಕಾರ ನಿಗದಿ ಪಡಿಸಿದ ಗುರಿಯನ್ನು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಮರ್ಪಣಾಭಾವನೆಯಿಂದ ಕಾರ್ಯವನ್ನು ನಿರ್ವಹಿಸಿಬೇಕು. ಹಾಗೆಯೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯಾವುದೆ ಕಾರಣಕ್ಕೂ ಅಧಿಕಾರಿಗಳ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ಸೂಚಿಸಿದರು
‘ಈಗಾಗಲೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ವಿವಿಧ ಯೋಜನೆ ಅಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಗುಣ ಮಟ್ಟದಿಂದ ಕೂಡಿರಬೇಕು. ನಿಗದಿ ಪಡಿಸಿದ ಕಾಲಮಿತಿಯ ಒಳಗಡೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಳಪೆ ಮಟ್ಟದ ಕಾಮಗಾರಿ ಕಂಡು ಬಂದರೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
‘ಪಂಚಾಯಿತಿಯ ಪಿಡಿಒ ಗಳು ತಮ್ಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಕಡ್ಡಾಯವಾಗಿ ಫಾಗಿಂಗ್ ಮಾಡಿಸಲು ಕ್ರಮಗಳನ್ನು ಕೈಗೊಳ್ಳಬೇಕು ಇದರ ಜತೆಗೆ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡಬೇಕು ಸ್ವಚ್ಛತಾ ವಾಹನಗಳನ್ನು ಪ್ರತಿದಿನ ಉಪಯೋಗಿಸಿ ಕಸ ಸಂಗ್ರಹ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.
‘ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಒಗ್ಗಟ್ಟಿನಿಂದ ಮನೆ ಮನೆಗೆ ಹಾಗೂ ಅಂಗಡಿಗಳಿಗೆ ತೆರಳಿ ಪ್ರತಿ ಗುರುವಾರ ತೆರಿಗೆಯನ್ನು ಸಂಗ್ರಹಿಸಿಬೇಕು’ ಎಂದರು.
ತಾಪಂ ಕಾರ್ಯನಿರ್ವಾಹ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಗಲಾ ಎಂ, ಸಿಡಿಪಿಒ ಮಲ್ಲಣ್ಣ ದೇಸಾಯಿ, ಎಇಇ ಮಂಜುನಾಥ, ಶಂಕರ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.