
ಸುರಪುರ: ‘ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಅವರು ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ’ ಎಂದು ಹಿರಿಯ ವಕೀಲ ಅಪ್ಪಾಸಾಹೇಬ ಪಾಟೀಲ ಹಗರಟಗಿ ಹೇಳಿದರು.
ಸಮೀಪದ ಕುಂಬಾರಪೇಟೆಯ ಶ್ರೀಗುರು ಪೀಠ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಉತ್ತಮ ಬದುಕಿಗಾಗಿ ವಿದ್ಯೆ ಎಲ್ಲರಿಗೂ ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳು ಬದುಕಿನಲ್ಲಿ ಸದೃಢವಾದ ಗುರಿ ಇಟ್ಟುಕೊಂಡು ಚೆನ್ನಾಗಿ ಓದಿ ಸಾಧನೆ ಮಾಡಿ ತಂದೆ-ತಾಯಿಗೆ ಕೀರ್ತಿ ತರಬೇಕು’ ಎಂದು ಸಲಹೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ ನಿಂಬೂರ ಮಾತನಾಡಿ, ‘ಸಂಸ್ಕಾರಯುತ, ಗುಣಮಟ್ಟದ ಹಾಗೂ ಸ್ಪರ್ಧಾತ್ಮಕ ಶಿಕ್ಷಣ ನೀಡುವುದೇ ಶಾಲೆಯ ಧ್ಯೇಯವಾಗಬೇಕು. ಮಕ್ಕಳು ವಿದ್ಯಾರ್ಥಿ ಜೀವನದಿಂದಲೇ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.
ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಮಾತನಾಡಿ, ‘ಶಿಕ್ಷಣ ವ್ಯಕ್ತಿಯ ಸರ್ವಾಂಗೀಣ ವ್ಯಕ್ತಿತ್ವ ವಿಕಸನ, ಜ್ಞಾನಾರ್ಜನೆ, ನೈತಿಕ ಮೌಲ್ಯಗಳ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ನೆರವಾಗುತ್ತದೆ’ ಎಂದರು.
ಶ್ರೀಗುರು ಪೀಠ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ರುದ್ರಪ್ಪ ದಿನ್ನಿಬಾವಿ ಅಧ್ಯಕ್ಷತೆ ವಹಿಸಿದ್ದರು. ಬಣಜಿಗರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಮಲ್ಲಣ್ಣ ಸಾಹುಕಾರ ಮುಧೋಳ, ಅಧ್ಯಕ್ಷ ಸುರೇಶ ತಂಬಾಕೆ ಇತರರು ವೇದಿಕೆಯಲ್ಲಿದ್ದರು. ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪಾಲಕ, ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದ್ದರು.
ಸಂಸ್ಥೆಯ ಉಪಾಧ್ಯಕ್ಷ ಸಿದ್ದರಾಮ ಬೇವಿನಮಟ್ಟಿ ಸ್ವಾಗತಿಸಿ ವಂದಿಸಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.