ADVERTISEMENT

‘ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್ ಟಿಕೆಟ್’: ಡಾ.ಶರಣಪ್ರಕಾಶ ಪ್ರಕಾಶ

ಗ್ರಾ.ಪಂ ಸದಸ್ಯರಿಗೆ ಮತದಾನ ಹಕ್ಕು ನೀಡಿದ ಪಕ್ಷಕ್ಕೆ ಮತ ನೀಡಿ; ಡಾ.ಶರಣಪ್ರಕಾಶ ಪ್ರಕಾಶ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 5:14 IST
Last Updated 5 ಡಿಸೆಂಬರ್ 2021, 5:14 IST
ಪ್ರಚಾರ ಸಭೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿದರು
ಪ್ರಚಾರ ಸಭೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿದರು   

ಯಾದಗಿರಿ: ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತ ಶಿವಾನಂದ ಪಾಟೀಲ ಅವರಿಗೆ ಟಿಕೆಟ್ ನೀಡಿದೆ. ಆದರೆ, ಬಿಜೆಪಿ ವ್ಯಾಪಾರಿಗೆ ಟಿಕೆಟ್ ನೀಡಿದ್ದಾರೆ. ಇದು ಶ್ರೀಮಂತ ಮತ್ತು ಬಡವರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತದಾನ ಹಕ್ಕು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮಾಜಿ‌ ಸಚಿವ ಡಾ.ಶರಣಪ್ರಕಾಶ ಪಾಟೀಲ‌ ಮನವಿ ಮಾಡಿದರು.

ಕಲಬುರಗಿ-ಯಾದಗಿರಿ ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಚುನಾವಣಾ ಅಂಗವಾಗಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆ‍ಪಿ ಪ್ರಕಾರ ಬಡವರು ಶಾಸಕ, ಸಂಸದರಾಗಬಾರದು. ನೀವೂ ಆಮಿಷಕ್ಕೆ ಒಳಗಾಗಬೇಡಿ. ನಿಮ್ಮ ಮತವನ್ನು ಮಾರಿಕೊಳ್ಳಬೇಡಿ. ಜನಸಾಮಾನ್ಯರ ಜತೆಗೆ ಇದ್ದವರಿಗೆ ಮತ ನೀಡಿದರೆ ನಿಮ್ಮ ಕಷ್ಟಗಳಿಗೆ ಸ್ಪಂದನೆ ನೀಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರ ವಿಕೇಂದ್ರೀಕಣದ ಮೇಲೆ ನಂಬಿಕೆ ಇಟ್ಟಿದೆ. ಬಿಜೆಪಿ ಪಕ್ಷ ಇವುಗಳ ವಿರುದ್ಧವಾಗಿದೆ ಎಂದು ಟೀಕಿಸಿದರು.

ADVERTISEMENT

ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಪುತ್ರ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಅಧಿಕಾರದಿಂದದೂರ ಇರಿಸಿದರು. ಆದರೆ, ಈಗ ಮತ್ತೆ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ ಪಡೆಯಲಾಗುತ್ತಿದೆ ಎಂದು ದೂರು ನೀಡಲಾಗಿದೆ ಎಂದರು.

ಬಿಜೆಪಿ ಹಣಬಲದಿಂದ ಚುನಾವಣೆ ಎದುರಿಸುತ್ತಿದೆ. ಆದರೆ, ಕಾಂಗ್ರೆಸ್‌ ಪಕ್ಷ ಪಂಚಾಯತ್‌ ರಾಜ್‌ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿದೆ. ಹೀಗಾಗಿ ಪಕ್ಷದಿಂದ ಆಯ್ಕೆಯಾದವರು ದ್ರೋಹ ಬಗೆಯುವ ಕೆಲಸ ಮಾಡಬೇಡಿ ಎಂದರು.

ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ಕಲಬುರಗಿ–ಯಾದಗಿರಿ ಮತಕ್ಷೇತ್ರದಲ್ಲಿ ಏನಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ. ಬಿ.ಜಿ.ಪಾಟೀಲ ಅವರು ಕಳೆದ 6 ವರ್ಷಗಳಲ್ಲಿ ಗ್ರಾ.ಪಂ ಸದಸ್ಯರನ್ನು ಭೇಟಿಯಾಗಿಲ್ಲ. ಅನುದಾನವೂ ಬಂದಿಲ್ಲ. ಸಂವಿಧಾನ 72, 73ನೇ ವಿಧಿಗೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತದಾನದ ಹಕ್ಕನ್ನು ಕಾಂಗ್ರೆಸ್‌ ಪಕ್ಷ ಕಲ್ಪಿಸಿದೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ಮಾತನಾಡಿ, ಈ ಭಾಗಕ್ಕೆ ಎಲ್ಲ‌ ರೀತಿಯಿಂದಲೂ ಮೀಸಲಾತಿ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು‌.‌ ಸಂವಿಧಾನ 371 (ಜೆ) ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಹೀಗಾಗಿ ನಮ್ಮ ಪಕ್ಷದ ಆಭ್ಯರ್ಥಿಗೆ ಮತ ನೀಡಬೇಕು ಎಂದರು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಶಿವಾನಂದ ಪಾಟೀಲ ಅವರನ್ನು ಪಕ್ಷ ಕಣಕ್ಕಿಳಿಸಿದೆ. ಗ್ರಾ.ಪಂ, ತಾ.ಪಂ, ಜಿ.ಪಂ ಆಡಳಿತ ತಿಳಿದುಕೊಂಡಿರು ಅಭ್ಯರ್ಥಿಗೆ ನಿಮ್ಮ ಮತ ಹಾಕಿ ಎಂದರು.

ವಿಧಾನ ಪರಿಷತ್ ಮಾಜಿ‌ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರು,‌ ಗುಣ ಅಥವಾ ಹಣವೋ ಮತದಾರರೇ ತೀರ್ಮಾನ ತೆಗೆದುಕೊಳ್ಳಿ. ಬಿಜೆಪಿ ನಾಟಕಕ್ಕೇ ಮರಳಾಗಬೇಡಿ. ಸಾರಿಗೆ ನೌಕರರಿಗೆ ಮೂರು ತಿಂಗಳಿಂದ ವೇತನ ಕೊಟ್ಟಿಲ್ಲ. ಇದು ಶೇ 40 ರ ಸರ್ಕಾರ ಎಂದು ಟೀಕಿಸಿದರು.

ಮಾಜಿ ಸಂಸದ ಬಿ.ವಿ.ನಾಯಕ, ಮುಖಂಡ ಎ.ಸಿ.ಕಾಡ್ಲೂರ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್‌ ವಕ್ತಾರ ಸ್ಯಾಂಸನ್‌ ಮಾಳಿಕೇರಿ ನಿರೂಪಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದರ್ಶನ ನಾಯಕ ಸ್ವಾಗತಿಸಿದರು.

ಈ ವೇಳೆ ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾರೆಡ್ಡಿ ಕಂದಕೂರ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೆಗಾರ, ಮುಖಂಡರಾದ ಡಾ.ಭೀಮಣ್ಣ ಮೇಟಿ, ಮರೆಪ್ಪ ಬಿಳ್ಹಾರ, ಚಿದಾನಂದ ಕಾಳಬೆಳಗುಂದಿ,‌ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಗೂಳಿ, ಶಂಕ್ರಣ್ಣ ವಳಿಕ್ಯಾಳ, ರಾಘವೇಂದ್ರ ಮಾನಸಗಲ್‌, ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.