ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿದ್ಯಾರ್ಥಿನಿ ಅನಘಾ ಕುಲಕರ್ಣಿ ಅವರಿಗೆ ₹5 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಲಾಯಿತು.
ವಿದ್ಯಾರ್ಥಿನಿಯ ಪರವಾಗಿ ಆಕೆಯ ತಂದೆ ಪವನ ಕುಲಕರ್ಣಿ ಅವರು ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ. ಪ್ರತಿಯೊಂದು ವಿದ್ಯಾರ್ಥಿಗಳಿಗೆ ತಲಾ ₹5 ಸಾವಿರ ಸೇರಿ ಒಟ್ಟು ₹1.50 ಲಕ್ಷ ನಗದು ಬಹುಮಾನ ನೀಡಲಾಗಿದೆ ಎಂದರು.
ಪತ್ರಕರ್ತರ ಮಕ್ಕಳ ಪ್ರತಿಭೆ ಗುರುತಿಸಿ ಅವರಿಗೆ ಪ್ರೋತ್ಸಾಹಿಸಲಾಗುತ್ತಿದೆ. ಸಂಘವು ಬೆನ್ನೆಲುಬಾಗಿ ನಿಂತು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಸಂಘದ ರಾಜ್ಯ ಪರಿಷತ್ತು ಸದಸ್ಯ ರಾಘವೇಂದ್ರ ಕಾಮನಟಗಿ ಮಾತನಾಡಿ, ಪತ್ರಕರ್ತರ ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸ ಸಂಘವು ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದರು.
ಸಂಘದ ಉಪಾಧ್ಯಕ್ಷರಾದ ರಾಜು ನಲ್ಲಿಕರ್, ಗುಂಡು ಭಟ್ ಜೋಶಿ, ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ್, ವೆಂಕಟಗಿರಿ ದೇಶಪಾಂಡೆ, ಅಮೀನ್ ಹೊಸೂರು, ನಾಗರಾಜ ಕೋಟೆ, ನಾಗರಾಜ ಬೀರನೂರ, ವಿಜಯಾಚಾರ್ಯ ಪುರೋಹಿತ, ವಿರುಪಾಕ್ಷಯ್ಯ ಸ್ವಾಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.