ಯಾದಗಿರಿ: ಕ್ವಾರಂಟೈನ್ ಕೇಂದ್ರಗಳಲ್ಲಿರುವ ವಲಸೆ ಕಾರ್ಮಿಕರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು.
ಕ್ವಾರಂಟೈನ್ ಕೇಂದ್ರಗಳ ಮೇಲ್ವಿಚಾರಣೆಗಾಗಿ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಬಂದೋ ಬಸ್ತ್ ಕಲ್ಪಿಸಬೇಕು, ಸರಿಯಾದ ಊಟ, ಶೌಚಾಲಯ, ಸ್ಯಾನಿಟೈಸರ್ ಮತ್ತು ಮಾಸ್ಕ್, ಶುದ್ಧ ಕುಡಿಯುವ ನೀರು ಸೇರಿದಂತೆ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಹತ್ತಿ ಖರೀದಿ ಕೇಂದ್ರ ಸ್ಥಾಪಿಸಿ:ಜಿಲ್ಲೆಯಲ್ಲಿ ಹಲವಾರು ರೈತರು ಹತ್ತಿ ಬೆಳೆದಿದ್ದು, ಅದು ಮಾರಾಟವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮತ್ತಷ್ಟು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಸದ್ಯ ಒಂದೇ ಹತ್ತಿ ಖರೀದಿ ಕೇಂದ್ರ ಇದ್ದು, ಇದನ್ನು 5ಕ್ಕೆ ಹೆಚ್ಚಿಸಬೇಕು. ಮುಂಗಾರು ಹಂಗಾಮಿಗೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಜಿಲ್ಲಾ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್, ಕಾಂಗ್ರೆಸ್ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಚೆನ್ನಾರೆಡ್ಡಿ ಪಾಟೀಲ ತುನ್ನೂರ್, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಮಂಜುಳ ಗೂಳಿ, ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸರೆಡ್ಡಿ ಪಾಟೀಲ ಅನಪುರ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ನೀಲಹಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶರಣಿಕುಮಾರ ಧೋಖಾ, ಜಿಲ್ಲಾ ಸೇವಾದಳ ಅಧ್ಯಕ್ಷ ಲಕ್ಷ್ಮಣ ರಾಥೋಡ್, ಶರಣಪ್ಪ ಕೊಲ್ಲೂರು, ತಿಮ್ಮಣ್ಣ ನಾಯಕ ಹಾಗೂ ಯಾದಗಿರಿ ಸೋಶಿಯಲ್ ಮೀಡಿಯಾ ಅಧ್ಯಕ್ಷ ಶಿವಕುಮಾರ್ ಕರದಳ್ಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.