ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಎಸ್ ಸೋಮನಾಳ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಮಾತನಾಡಿದ ಅವರು, ‘ಎಲ್ಲಾ ಧರ್ಮ, ಭಾಷೆ ಹಾಗೂ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡುವುದು ಸದ್ಭಾವನಾ ದಿನದ ಉದ್ದೇಶವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.
‘ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ. ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ’ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ವಿಕ್ರಮಸಿಂಗ್ ಠಾಕೂರ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿ ಅಧೀಕ್ಷಕ ಸಾಬಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಶಿರಸ್ತೇದಾರರು, ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.