ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದು, ಸವಾಲುಗಳ ಮಧ್ಯೆ ಸಮರ್ಥವಾಗಿ ಆಡಳಿತ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹೇಳಿದರು.
ಅಧಿಕಾರಕ್ಕೆ ಬಂದ ವೇಳೆಮಳೆಯಿಂದ ಹಾನಿಯಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿಯವರು ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಲು ನೆರವಾಗಿದ್ದರು. ಅಲ್ಲದೆ ತಕ್ಷಣವೇ ಪರಿಹಾರ ಘೋಷಿಸಿದ್ದಾರೆ. ಕಠಿಣ ಸವಾಲುಗಳನ್ನು ಎದುರಿಸಿ ರೈತರಿಗೆ, ದುರ್ಬಲರಿಗೆ ಎಲ್ಲ ವರ್ಗದ ಜನರಿಗೆ ನೆರವಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವೈದ್ಯಕೀಯ ಕಾಲೇಜನ್ನು ರದ್ದುಗೊಳಿಸಿದ್ದರು. ಆದರೆ, ಯಡಿಯೂರಪ್ಪ ಅವರು ಮತ್ತೆ ಜಿಲ್ಲೆಗೆ ಮಂಜೂರು ಮಾಡಿದ್ದಾರೆ. ಇದು ಟೆಂಡರ್ ಹಂತದಲ್ಲಿದ್ದು, ಶೀಘ್ರವೇ ಶಂಕುಸ್ಥಾಪನೆ ಮಾಡಲಾಗುವುದು. ಅಲ್ಲದೆ ಜಿಲ್ಲೆಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದಾರೆ. ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಇದನ್ನು ಸದುಪಯೋಗ ಮಾಡಿಕೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು.
ರೈತರ ಪರ ಕಾಳಜಿ ಇದ್ದರಿಂದಲೇ ದೇಶದಲ್ಲಿಯೇ ರೈತ ಪರ ಬಜೆಟ್ ಮಂಡಿಸಿದ್ದಾರೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. ಹಲವಾರು ಕಾಯ್ದೆಗಳನ್ನು ಜಾರಿ ತರುವ ಮೂಲಕ ಹಿತ ಕಾಪಾಡುತ್ತಿದೆ ಎಂದರು.
ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ವಿಲಾಸ್ ಪಾಟೀಲ, ವೆಂಕಟರೆಡ್ಡಿ ಅಬ್ಬೆತುಮಕೂರ, ಜಿಪಂ ಮಾಜಿ ಸದಸ್ಯ ದೇವರಾಜ ನಾಯಕ, ನಾಗರತ್ನ ಕುಪ್ಪಿ, ಚಂದ್ರಶೇಖರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.