
ಯಾದಗಿರಿ: ‘ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವದಿಲ್ಲ’ ಎಂದು ಎಐಡಿಎಸ್ಒ ರಾಜ್ಯ ಅಧ್ಯಕ್ಷೆ ಅಶ್ವಿನಿ ಕೆ.ಎಸ್ ಹೇಳಿದರು.
ಮಹಾತ್ಮ ಜ್ಯೋತಿರಾವ್ ಫುಲೆ ಅವರ 135 ನೇ ಸ್ಮರಣ ದಿನ ಹಾಗೂ ಎಐಡಿಎಸ್ಒ ಜಿಲ್ಲಾ ಸಮಾವೇಶದ ಅಂಗವಾಗಿ ಯಾದಗಿರಿ ನಗರದ ಸಿದ್ದಲಿಂಗೇಶ್ವರ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
‘ಈ ಹಿಂದೆ ಸರ್ಕಾರ ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದಾಗ ಅದರ ವಿರುದ್ಧ 50 ಲಕ್ಷ ಸಹಿ ಸಂಗ್ರಹಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಹಿಮ್ಮೆಟಿಸುವಲ್ಲಿ ವಿದ್ಯಾರ್ಥಿಗಳು ಸಫಲಾರಾಗಿದ್ದರು. ಈಗ 6000 ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸಾವಿರಾರು ಶಾಲೆಗಳನ್ನು ಮುಚ್ಚಲು ಮುಂದಾಗಿರುವದು ಕಳವಳಕಾರಿಯಾಗಿದೆ. ಇದೇ ಸ್ಥಿತಿ ಮುಂದುವರೆದರೇ ಸರ್ಕಾರಿ ಶಾಲೆಗಳನ್ನು ಉಳಿಸಲು ಇನ್ನೊಂದು ನವೋದಯ ಚಳುವಳಿಗೆ ತಯಾರಾಗಬೇಕಿದೆ’ ಎಂದರು.
ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ‘ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಹಾಗೂ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಬೇಕು’ ಎಂದು ಆಗ್ರಹಿಸಿದರು.
ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ವೇದಿಕೆಯಲ್ಲಿದ್ದರು.
ಇದೇ ವೇಳೆಯಲ್ಲಿ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಚಾಲಕರಾಗಿ ಶಿಲ್ಪಾ ಬಿ.ಕೆ, 6 ಜನ ಸಹ ಸಂಚಾಲಕರು ಹಾಗೂ 15 ಜನ ಜಿಲ್ಲಾ ಸಮಿತಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.