ಯಾದಗಿರಿ: ತಮ್ಮ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಕಳೆದ ಎರಡು ವರ್ಷಗಳಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕೂಡಲೇ ಬಾಕಿ ವೇತನ ₹382 ಕೋಟಿ ವೇತನ ಹಣ ಬಿಡುಗಡೆ ಮಾಡಬೇಕು.ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪಂಚಾಯಿತಿಯ ಕರ ವಸೂಲಿ ಹಣದಲ್ಲಿಶೇಕಡ40ರಷ್ಟು ಹಣದಲ್ಲಿ ಸಿಬ್ಬಂದಿ ಬಾಕಿ ವೇತನ ಪಾವತಿ ಮಾಡಬೇಕು. ಎಲ್ಲಾ ಸಿಬ್ಬಂದಿಗೆ ಪಿಂಚಣಿ ನೀಡಬೇಕು. ವೈದ್ಯಕೀಯ ವೆಚ್ಚ ನೀಡಬೇಕು. ನೌಕರರಿಗೆ ಸಮವಸ್ತ್ರ ನೀಡಬೇಕು ಎಂದು
ಒತ್ತಾಯಿಸಿದರು.
ನಿವೃತ್ತಿ ಹೊಂದಿದ ನೌಕರರಿಗೆ ಬಾಕಿ ವೇತನ ಹಾಗೂ ನಿವೃತ್ತಿ ವೇತನ ನೀಡಬೇಕು. ಬಿಲ್ ಕಲೆಕ್ಟರ್ ಖಾಲಿ ಇರುವ ಹುದ್ದೆಗೆ ಅರ್ಹ ಪಂಪ್ ಆಪರೇಟರ್ಗಳಿಗೆ ಬಡ್ತಿ ನೀಡಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.
ನಂತರ ಜಿಲ್ಲಾಧಿಕಾರಿ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ,ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಣ್ಣ ಬಿರಾದಾರ, ಜಿಲ್ಲಾ ಖಜಾಂಚಿ ಶರೀಫ್ ಅಗ್ನಿ, ಪ್ರಧಾನ ಕಾರ್ಯದರ್ಶಿಗಳಾದ ಗಾಲಿಬಸಾಬ್ ಬೆಳಗೇರಾ, ಸಿದ್ದು ಮೂಡಬೂಳ, ಯಲ್ಲಪ್ಪ ದೇವಾಪುರ, ಸುರಪುರ ತಾಲ್ಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ, ಯಾದಗಿರಿ ತಾಲ್ಲೂಕು ಅಧ್ಯಕ್ಷ ಬಸವರಾಜ ದೊರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.