ವಡಗೇರಾ: ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದ ಹೈಯ್ಯಾಳ ಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ವಿದ್ಯಾಧರ ಜಾಕಾ ನೇತೃತ್ವದಲ್ಲಿ ವಡಗೇರಾ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಮನವಿ ಸಲ್ಲಿಸಲಾಯಿತು.
‘ಹೈಯ್ಯಾಳ ಲಿಂಗೇಶ್ವರ ದೇವಸ್ಥಾನ ಅತ್ಯಂತ ಪುರಾತನ ದೇವಸ್ಥಾನವಾಗಿದೆ. ಇದು ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ಇಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ಇಲ್ಲಿ ಆಗಸ್ಟ್ ಮತ್ತು ಜನವರಿ ತಿಂಗಳಲ್ಲಿ ಎರಡು ಬಾರಿ ಜಾತ್ರೆಯು ಅತ್ಯಂತ ದೊಡ್ಡ ಪ್ರಮಾಣದಲ್ಲಿ ಜರಗುತ್ತದೆ. ಬರುವ ಆಗಸ್ಟ್ 8ರಿಂದ ಜಾತ್ರೆ ಆರಂಭವಾಗುತ್ತಿದೆ. ಮೂಲ ಸೌಕರ್ಯಕ್ಕೆ ಆದ್ಯತೆ ನೀಡಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
‘ಪ್ರತಿ ಅಮಾವಾಸ್ಯೆಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಆದರೆ, ಸರಿಯಾದ ಮೂಲ ಸೌಕರ್ಯಗಳಿಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತಿದ್ದಾರೆ. ಅದಕ್ಕಾಗಿ ಬೇರೆ ಸ್ಥಳಗಳಿಂ ದ ಬರುವ ಭಕ್ತರಿಗೆ ಕೊಠಡಿಗಳ ನಿರ್ಮಾಣ, ಮಹಿಳೆಯರಿಗೆ ಶೌಚಾಲಯ ಸ್ನಾನದ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ, ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಸಾರಿಗೆ ಸೌಲಭ್ಯ ಒದಗಿಸಬೇಕು. ಗ್ರಾಮದ ಮುಖ್ಯರಸ್ತೆಯಿಂದ ದೇವಸ್ಥಾನದವರೆಗೆ ರಸ್ತೆ ನಿರ್ಮಾಣ ಮಾಡಬೇಕು. ವಿದ್ಯುತ್ ದ್ವೀಪಗಳನ್ನು ಅಳವಡಿಸಿ ದೇವಸ್ಥಾನ ಅಭಿವೃದ್ಧಿ ಪಡಿಸಬೇಕು’ ಎಂದಿದ್ದಾರೆ.
‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಜಮೀನುಗಳಿಗೆ ಹೋಗುವ ರಸ್ತೆಗಳ ಬಗ್ಗೆ ರೈತರ ನಡುವೆ ಕಲಹಗಳು ಆಗುತ್ತಿವೆ. ಅದಕ್ಕಾಗಿ ಜಮೀನುಗಳಿಗೆ ಹೋಗುವ ರಸ್ತೆಗಳ ಸರ್ವೆ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶರಣು ಜಡಿ, ಗ್ರಾಮ ಘಟಕದ ಅಧ್ಯಕ್ಷ ದೇವಪ್ಪ ಹೊರಟುರ, ವೆಂಕಟೇಶ ಇಟಗಿ, ಮಲ್ಲಿಕಾರ್ಜುನ, ಶಂಭು ಜಡಿ, ರೈತ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.