ಕೆಂಭಾವಿ: ಇಂದಿನ ದಿನಮಾನದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಅವಶ್ಯಕತೆ ತುಂಬಾ ಇದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರಹೇಳಿದರು.
ಪಟ್ಟಣದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿರ್ಮಿಸಿದ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಶತಮಾನೋತ್ಸವ ಆಚರಿಸುತ್ತಿರುವ ಈ ಶಾಲೆಗೆ ಸುಮಾರು ₹1 ಕೋಟಿ ಅನುದಾನದಲ್ಲಿ 10 ಕೋಣೆಗಳನ್ನು ನಿರ್ಮಿಸಲಾಗಿದೆ. ಹೆಚ್ಚುವರಿ ಕೋಣೆಗಳಿಗಾಗಿ ಇನ್ನೂ ₹40 ಲಕ್ಷ ಬಿಡುಗಡೆ ಮಾಡಲಾವುದು ಎಂದು ತಿಳಿಸಿದರು.
ಈ ಭಾಗದ ಎಲ್ಲ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುವುದು. ಮುಂದಿನ ದಿನಗಳಲ್ಲಿ ಶತಮಾನೋತ್ಸವ ಆಚರಿಸುತ್ತಿರುವ ಈ ಶಾಲೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ಜಿ.ಪಂ ಅಧ್ಯಕ್ಷ ಬಸನಗೌಡ ಯಡಿಯಾಪುರ ಮಾತನಾಡಿ, ಎಲ್ಲ ಶಿಕ್ಷಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಶಾಲೆಗೆ ಹಾಜರಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳು ಮಕ್ಕಳಿಗೆ ಲಭ್ಯತೆ ಇದ್ದು ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವಂತಾಗಬೇಕು. ಜಿ.ಪಂ ವತಿಯಿಂದ ಶಾಲೆಗಳ ಮೂಲ ಸೌಕರ್ಯಕ್ಕೆ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಮಾಸಮ್ಮ ಹಲಗಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ಪಾಟೀಲ, ಪುರಸಭೆ ಉಪಾಧ್ಯಕ್ಷ ಸೋಫಿ ಶರಮತ್ ನಾಶಿ, ಪುರಸಭೆ ಸದಸ್ಯ ಬಸವರಾಜ ಬಸರಿಗಿಡ, ಮುಖ್ಯಗುರು ಧರೆಪ್ಪ ಬೊರಗಿ, ಎಸ್ಡಿಎಂಸಿ ಅಧ್ಯಕ್ಷ ಮಡಿವಾಳಪ್ಪ ದೊಡ್ಡಮನಿ, ಮುಖಂಡರಾದ ವಾಮನರಾವ ದೇಶಪಾಂಡೆ, ಬಾಬುಗೌಡ ಮಾಲಿಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಚಿಂಚೋಳಿ, ಸಂಜೀವರಾವ ಕುಲಕರ್ಣಿ ಭಾಗವಹಿಸಿದ್ದರು.
ಶಿಕ್ಷಕ ಬಂದೇನವಾಜ ನಾಲತವಾಡ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.