ADVERTISEMENT

ಹೆಚ್ಚುತ್ತಿರುವ ಪ್ರವಾಹ ಸ್ಥಿತಿ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 19:44 IST
Last Updated 7 ಆಗಸ್ಟ್ 2019, 19:44 IST
07 Ydr ವಡೆಗೇರಾ ತಾಲ್ಲೂಕಿನ ಚೆನ್ನೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ ಗಂಜಿ ಕೇಂದ್ರಗಳಿಗೆ ಬರುವಂತೆ ಗ್ರಾಮಸ್ಥರ ಮನವೊಲಿಸಿದರು
07 Ydr ವಡೆಗೇರಾ ತಾಲ್ಲೂಕಿನ ಚೆನ್ನೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ ಗಂಜಿ ಕೇಂದ್ರಗಳಿಗೆ ಬರುವಂತೆ ಗ್ರಾಮಸ್ಥರ ಮನವೊಲಿಸಿದರು   

ಯಾದಗಿರಿ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಬುಧವಾರ 4.57 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸುತ್ತಿದ್ದು, ಪ್ರವಾಹದ ಪರಿಸ್ಥಿತಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಇದರಿಂದ ನದಿ ಪಾತ್ರದ ಗ್ರಾಮಸ್ಥರ ಜನ ಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ.

ಜಿಲ್ಲಾಡಳಿತ ನದಿ ಪಾತ್ರದ ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಸ್ಥರನ್ನು ಗಂಜಿ ಕೇಂದ್ರಗಳಿಗೆ ಕರೆ ತರುವ ಪ್ರಯತ್ನ ಮಾಡುತ್ತಿದೆ. ಕೆಲ ಗಡ್ಡಿ ಪ್ರದೇಶದ ಜನರು ಅಧಿಕಾರಿಗಳು ಮನವೊಲಿಸಿದರೂ ಗ್ರಾಮ ಬಿಟ್ಟು ಬರುವುದಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದರಿಂದ ಗಂಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಲು ಸಮಸ್ಯೆಯಾಗಿದೆ.
ವಡಗೇರಾ ತಾಲ್ಲೂಕಿನ ಚನ್ನೂರು, ಗೊಂದೇನೂರು ಗ್ರಾಮಗಳ ಜನರು ಬಿಡಲು ಒಪ್ಪುತ್ತಿಲ್ಲ. ಆದರೂ ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ನೀಲಕಂಠರಾಯನ ಗಡ್ಡಿ ಸೇತುವೆ ಮುಳುಗುವ ಹಂತಕ್ಕೆ ಬಂದಿದೆ. ಇದರಿಂದ ಮತ್ತೆ ಸಂಪರ್ಕ ಕಡೆದುಕೊಳ್ಳುವ ಭೀತಿ ಎದುರಾಗಿದೆ. ಕೊಳ್ಳೂರು (ಎಂ) ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜಿಲ್ಲಾಡಳಿದ ವತಿಯಿಂದ 10 ಕಡೆ ಗಂಜಿ ಕೇಂದ್ರಗಳನ್ನು ಸ್ಥಾ‍ಪನೆ ಮಾಡಲಾಗಿದೆ.

ADVERTISEMENT


ನೀರು ಹೆಚ್ಚು ಹರಿಬಿಟ್ಟ ಹಿನ್ನೆಲೆಯಲ್ಲಿ ಕೊಳ್ಳೂರು(ಎಂ)–ಮರಕಲ್, ಹಯ್ಯಾಳ–ಐಕೂರು ರಸ್ತೆ ಕಡಿತಗೊಂಡಿದೆ. ಇದರಿಂದ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.