
ಯಾದಗಿರಿ: ‘ಭಾರತ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿರಲು, ಸಂವಿಧಾನ ಭದ್ರ ಬುನಾದಿಯಾಗಿದೆ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.
ನಗರದ ಪದವಿ ಕಾಲೇಜು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ, ಅವರು ಮಾತನಾಡಿದರು.
‘ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಹಲವು ಮಹಾನ್ ನಾಯಕರ ಪರಿಶ್ರಮದ ಫಲವಾಗಿ ಈ ಸಂವಿಧಾನ ಸ್ಥಾಪನೆಯಾಗಿದ್ದು, ಇಂತಹ ಅಮೂಲ್ಯವಾದ ಸಂವಿಧಾನದಿಂದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ’ ಎಂದು ಹೇಳಿದರು.
‘ಭಾರತದ ಇತಿಹಾಸದಲ್ಲಿ 1949ರ ನವೆಂಬರ್ 26 ಅತ್ಯಂತ ಮಹತ್ವದ ದಿನವಾಗಿದೆ. ಸಂವಿಧಾನದ ಸ್ಥಾಪನೆಯಿಂದಾಗಿ ಸಮಾಜದಲ್ಲಿ ದೊಡ್ಡ ಬದಲಾವಣೆ ಕಂಡಿದ್ದು, ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ತಿತ್ವಕ್ಕೆ ಬಂತು. ಇಂತಹ ಮಹತ್ವವಾದ ಸಂವಿಧಾನದ ಆಶಯಗಳನ್ನು ಎಲ್ಲರೂ. ಮನಗಾಣಬೇಕು’ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕಲಬುರಗಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಎಂ. ಬೇಂದ್ರೆ ಮಾತನಾಡಿ, ‘ಭಾರತದ ಸಂವಿಧಾನವು ಸರ್ವಧರ್ಮ ಸಮಬಾಳು, ಜಾತ್ಯಾತೀತ ಮನೋಭಾವ ದೇಶದ ಉಜ್ವಲ ಭವಿಷ್ಯಕ್ಕೆ ಸಹಕಾರಿ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ತೇಜು ರಾಠೋಡ ಸಂವಿಧಾನ ಪೀಠಿಕೆ ವಾಚನ ಮಾಡಿ, ಮತದಾನದ ಮಹತ್ವದ ಕುರಿತು ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಟಿ.ಸಿದ್ದಣ್ಣ, ತಹಶೀಲ್ದಾರ್ ಸುರೇಶ ಅಂಕಲಗಿ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಭಾಷಣ, ಚಿತ್ರ ಕಲೆ, ಬೈಕ್,ಸೈಕಲ್ ರಾಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಅವರು ಸ್ವಾಗತಿಸಿದರು. ಶಂಭುಲಿಂಗ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.ದೇವೇಂದ್ರಪ್ಪ ವಂದಿಸಿದರು. ಚಂದ್ರಶೇಖರ ಗೋಗಿ ಹಾಗೂ ವಟಾರ್ ಅವರು ಪ್ರಾರ್ಥಿಸಿದರು.
ಇದಕ್ಕೂ ಮುನ್ನ ಬೆಳಿಗ್ಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.