ADVERTISEMENT

ಸಂಪೂರ್ಣ ಲಾಕ್‌ಡೌನ್‌ನಿಂದ ಸೋಂಕು ನಿಯಂತ್ರಣ: ಡಿಸಿ ರಾಗಪ್ರಿಯಾ

ಮೂರನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ ನೀಡಲು ಗುರಿ:

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 2:22 IST
Last Updated 12 ಜೂನ್ 2021, 2:22 IST
ಡಾ.ರಾಗಪ್ರಿಯಾ
ಡಾ.ರಾಗಪ್ರಿಯಾ   

ಯಾದಗಿರಿ: ಜಿಲ್ಲೆಯಲ್ಲಿ ವಾರದಲ್ಲಿ ಕೆಲ ದಿನ ಸಂಪೂರ್ಣ ಲಾಕ್‌ಡೌನ್‌ ಕಾರಣದಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಇದು ಸಂಪೂರ್ಣ ಕಡಿಮೆ ಆಗುವ ವರೆಗೂ ಜನತೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌, ತಿಳಿಸಿದರು.

ಸಂಪೂರ್ಣ ಲಾಕ್‌ಡೌನ್‌ ಕಾರಣದಿಂದ ಸೋಂಕು ಹರಡುವಿಕೆ ಕಡಿಮೆಯಾಗಿದೆ. ಮರಣ ಪ್ರಮಾಣವೂ ನಿಯಂತ್ರಣಕ್ಕೆ ಬಂದಿದೆ. ಆಮ್ಲಜನಕ ಬೆಡ್‌ಗಳನ್ನು ಹೆಚ್ಚಳ ಮಾಡಲಾಗಿದೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಜಿಲ್ಲಾಸ್ಪತ್ರೆ ಮತ್ತು ಎರಡು ತಾಲ್ಲೂಕು ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್‌ ಯಂತ್ರ ಖರೀದಿಸಲು ಟೆಂಡರ್‌ ಕರೆಯಲಾಗಿದೆ. ಅಲ್ಲದೇ ತಾಲ್ಲೂಕು ಆಸ್ಪತ್ರೆಗಳಲ್ಲಿ 500 ಎಲ್‌ಪಿಎಂ ಆಮ್ಲಜನಕ ಘಟಕ ಯಂತ್ರ ಸ್ಥಾಪಿಸಲಾಗುವುದು ಎಂದರು.

ADVERTISEMENT

ಜಿಲ್ಲೆಯಲ್ಲಿ ಸದ್ಯ 20 ಸಾವಿರ ಲಸಿಕೆ ಲಭ್ಯವಿದ್ದು, ಪ್ರತಿದಿನ 5–6ರ ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. 18ರಿಂದ 44 ವರ್ಷದೊಳಗಿನ 19 ವಿಭಾಗಗಳ ಜನರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗಿದೆ. ಮೂರನೇಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ ನೀಡಲು ಗುರಿ ಹೊಂದಲಾಗಿದೆ. ಸುಮಾರು 2ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

ನಗರಾಭಿವೃದ್ಧಿ ಇಲಾಖೆ ವತಿಯಿಂದ ಲಾಕ್‌ಡೌನ್‌ ಜಾರಿಯಾದಂದಿನಿಂದ ₹86 ಲಕ್ಷ ದಂಡ ಸಂಗ್ರಹ ಮಾಡಲಾಗಿದೆ. ವೈದ್ಯಕೀಯ ಕಾಲೇಜುಗೆ ವೈದ್ಯರ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 4 ಮಕ್ಕಳ ತಜ್ಞರಿದ್ದು, ವೈದರ ಕೊರತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 4 ಬ್ಲ್ಯಾಂಕ್‌ ಫಂಗಸ್‌ ಪತ್ತೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ನೈಸರ್ಗಿಕ ವಿಕೋಪ ನಿಧಿಯಡಿ ₹34 ಕೋಟಿ ಹಣವಿದೆ ಎಂದರು.

419 ಗ್ರಾಮಗಳು ಕೋವಿಡ್‌ ಮುಕ್ತವಾಗಿವೆ. 1ರಿಂದ 5 ಹಸಿರು ವಲಯ ಗ್ರಾಮ 119, 6ರಿಂದ 10 ಪ್ರಕರಗಳಿರುವ ಎರಡು ಗ್ರಾಮಗಳಿವೆ. ಹಂತ ಹಂತವಾಗಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ ಎಂದರು.

ಸಂಪೂರ್ಣ ಲಾಕ್‌ಡೌನ್‌ ವೇಳೆ ರೈತರು ಬೀಜ, ರಸಗೊಬ್ಬರ ಖರೀದಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಗ್ರಾಮದಿಂದ ಹೋಬಳಿ, ನಗರ ಪ್ರದೇಶಕ್ಕೆ ಬಂದಾಗ ವಾಹನವನ್ನು ಪೊಲೀಸರು ವಶಪಡಿಸಿಕೊಳ್ಳುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜೊತೆಗೆ ಮಾತನಾಡುವುದಾಗಿ ತಿಳಿಸಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುಬಾಷಿರ್‌ ಸಾಜೀದ್‌, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಅನ್ವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.