ವಡಗೇರಾ: ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾ.ಪಂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಸೂಚಿಸಿದರು.
ತಾಲ್ಲೂಕಿನ ಹುಂಡೆಕಲ್ ಗ್ರಾಮಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
‘ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕಾರಣಕ್ಕೂ ತಮ್ಮ ಕೆಲಸ ಕಾರ್ಯದಲ್ಲಿ ಉದಾಸೀನತೆಯನ್ನು ತೋರದೆ, ಗ್ರಾಮಸ್ಥರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
ಗ್ರಾಮದಲ್ಲಿ ಇರುವ ತಗ್ಗು ಗುಂಡಿಗಳನ್ನು ಮುಚ್ಚಿ, ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಹಾಗೆಯೇ ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡುವುದರ ಜತೆಗೆ ರೋಗರುಜಿನಗಳು ಹರಡದಂತೆ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ ನೀರನ್ನು ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ಸಿಸಿ ರಸ್ತೆ ನಿರ್ಮಿಸದಿದ್ದಲ್ಲಿ ಪ್ರತಿಭಟನೆ: ‘ಹುಂಡೆಕಲ್ ಗ್ರಾಮದ ಅಭಿವೃದ್ಧಿಗೆ ಬಂದಂತಹ ಅನುದಾನ ಎಲ್ಲಿಗೆ ಹೋಯಿತು. ಗ್ರಾಮ ಮೂಲಸೌಕರ್ಯಗಳಿಂದ ವಂಚಿತವಾಗಲು ಕಾರಣ ಯಾರು? ಕಲುಷಿತ ನೀರು ನಿಂತು ಡೆಂಗಿ ಸಾಂಕ್ರಾಮಿಕ ರೋಗ ಹರಡುತ್ತಿದ್ದು, ಸೊಳ್ಳೆಗಳ ಹಾವಳಿಗೆ ಜನ ಜಾನುವಾರುಗಳು ತತ್ತರಿಸಿವೆ. ಚರಂಡಿ , ಸಿ ಸಿ ರಸ್ತೆ ನಿರ್ಮಾಣವನ್ನು ಪೂರ್ಣ ಪ್ರಮಾಣದಲ್ಲಿ ಮಾಡದಿದ್ದರೆ ಪ್ರತಿಭಟನೆ ಮಾಡಲಾಗುವುದು’ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.