ADVERTISEMENT

ಮಂದಗತಿಯಲ್ಲಿ ಜೆಜೆಎಂ ಕಾಮಗಾರಿ: ನೀರಿನ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:24 IST
Last Updated 22 ಜೂನ್ 2025, 14:24 IST
ಯರಗೋಳ ವ್ಯಾಪ್ತಿಯ ಹತ್ತಿಕುಣಿ ಗ್ರಾಮದಲ್ಲಿ ಜೆಜೆಎಂ ಅಡಿ ನಿರ್ಮಾಣವಾಗುತ್ತಿರುವ ಕುಡಿಯುವ ನೀರಿನ ಟ್ಯಾಂಕ್
ಯರಗೋಳ ವ್ಯಾಪ್ತಿಯ ಹತ್ತಿಕುಣಿ ಗ್ರಾಮದಲ್ಲಿ ಜೆಜೆಎಂ ಅಡಿ ನಿರ್ಮಾಣವಾಗುತ್ತಿರುವ ಕುಡಿಯುವ ನೀರಿನ ಟ್ಯಾಂಕ್   

ಹತ್ತಿಕುಣಿ (ಯರಗೋಳ): ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಕಳೆದ 2 ವರ್ಷಗಳ ಹಿಂದೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಅಂದಾಜು ₹3.11 ಕೋಟಿ ಅನುದಾನ ಕಾಮಗಾರಿ ಟೆಂಡರ್ ಕರೆಯಲಾಯಿತು. ಕಾಮಗಾರಿ ವಿಳಂಬದಿಂದ ಟ್ಯಾಂಕ್ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿಲ್ಲ. ಗ್ರಾಮ ಪಂಚಾಯಿತಿಯಿಂದ 3 ಕೊಳವೆ ಬಾವಿಗಳ ಮೂಲಕ ನೀರು ಪೂರೈಸುತ್ತಿದ್ದು, ಗ್ರಾಮದ ಪ್ರತಿ ಕುಟುಂಬಗಳಿಗೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ. ಜನರು ನೀರು ತರಲು ಪರದಾಡುತ್ತಿದ್ದಾರೆ.

‘ಕಾಮಗಾರಿ ಮೇಲುಸ್ತುವಾರಿ ಹೊಂದಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಸೂಕ್ತ ಕಾಮಗಾರಿ ಪರಿಶೀಲನೆ ಮಾಡದೆ, ಗುತ್ತಿಗೆದಾರನಿಗೆ ಅಂದಾಜು ₹1.20 ಕೋಟಿ ಬಿಲ್ ಮಾಡಿದ್ದಾರೆ. ಯೋಜನೆ ಕಾಮಗಾರಿ ಯಾವಾಗ ಮುಗಿಯುತ್ತದೆ. ಜನರಿಗೆ ಕುಡಿಯುವ ನೀರು ಸರಬರಾಜಾಗುತ್ತದೆ ಇಲ್ಲವೇ ಎಂಬ ಸಂಶಯ ಕಾಡುತ್ತಿದೆ’ ಎಂದು ಗ್ರಾಮದ ರೈತ ಸಂಘದ ಮುಖಂಡ ಹಣಮಂತ ಮಡಿವಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಆನಂದ ಅವರನ್ನು ಸಂಪರ್ಕಿಸಿದಾಗ, ‘ಗುತ್ತಿಗೆದಾರನಿಗೆ ಕಾಮಗಾರಿ ವಿಳಂಬ ಕುರಿತು ನೋಟಿಸ್‌ ನೀಡಿದ್ದೇವೆ, ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.


ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.