ಯಾದಗಿರಿ: ಸೆ.17ರಂದು ‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ’ ನಿಮಿತ್ತ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.
ಸೆಪ್ಟೆಂಬರ್ 14 ರಂದು ಜಿಲ್ಲೆಯ ಎಲ್ಲಾ 16 ಕಂದಾಯ ಹೋಬಳಿಗಳಲ್ಲಿನ ಶಾಲೆಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುರಪುರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕಕ್ಕೇರಾ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೆಂಭಾವಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಹುಣಸಗಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕೊಡೆಕಲ್ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಯಾದಗಿರಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗ್ರಾಮ ಸೈದಾಪುರ ಸರ್ಕಾರಿ ಪ್ರೌಢ ಶಾಲೆ, ಬಳಿಚಕ್ರ ಸರ್ಕಾರಿ ಪ್ರೌಢಶಾಲೆ ಶಾಲೆ, ಹತ್ತಿಕುಣಿ ಸರ್ಕಾರಿ ಪ್ರೌಢಶಾಲೆ, ಗುರುಮಠಕಲ್ ಸರ್ಕಾರಿ ಬಾಲಕರ ಪ.ಪೂ.ಕಾಲೇಜು, ಕೊಂಕಲ್ ಸರ್ಕಾರಿ ಪ್ರೌಢ ಶಾಲೆ, ಶಹಾಪುರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗೋಗಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ದೋರನಹಳ್ಳಿ ಸರ್ಕಾರಿ ಪ್ರೌಢಶಾಲೆ, ವಡಗೇರಾ ಸರ್ಕಾರಿ ಪ್ರೌಡ ಶಾಲೆ, ಹಯ್ಯಾಳ (ಬಿ) ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಮನ್ವಯ ಅಧಿಕಾರಿಗಳಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 16 ರಂದು ಜಿಲ್ಲಾಮಟ್ಟದ ಆರೋಗ್ಯ ಮೇಳ, ಸೆಪ್ಟೆಂಬರ್ 17 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಮಹೋತ್ಸವದ ಇತಿಹಾಸದ ಹಿನ್ನೆಲೆ ಬಿಂಬಿಸುವ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.