ಹುಣಸಗಿ: ‘ಭಾರತೀಯ ಪರಂಪರೆಯಲ್ಲಿ ಸುಗ್ಗಿ ವಿಶಿಷ್ಟ ಸ್ಥಾನ ಪಡೆದಿದೆ. ವರ್ಷಪೂರ್ತಿ ಬೆವರು ಸುರಿಸಿ ಬೆಳೆದ ಬೆಳೆಯ ಫಸಲು ಪಡೆದು ರೈತರು ಸಂಭ್ರಮಿಸುವ ಕ್ಷಣವಾದ ಸುಗ್ಗಿ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುತ್ತದೆ’ ಎಂದು ಶಾಸಕ ರಾಜೂಗೌಡ ಹೇಳಿದರು.
ಹುಣಸಗಿ ತಾಲ್ಲೂಕಿನ ಕನ್ನೇಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಸುಗ್ಗಿ ಹುಗ್ಗಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಗ್ರಾಮೀಣ ಭಾಗದ ಕಲಾವಿದರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಮಾತನಾಡಿ, ಸುಗ್ಗಿ– ಹುಗ್ಗಿ ಕಾರ್ಯಕ್ರಮದ ಮೂಲಕ ಕನ್ನೇಳ್ಳಿ ಗ್ರಾಮವೇ ಹಬ್ಬದಂತೆ ಸಿಂಗಾರ ಗೊಂಡಿದ್ದು, ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ ಎಂದರು.
ಜಾನಪದ ಅಕಾಡೆಮಿ ಸದಸ್ಯ ಅಮರಯ್ಯ ಸ್ವಾಮಿ ಜಾಲಿಬೆಂಚಿ ಮಾತನಾಡಿ, ಅಕಾಡೆಮಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಲೆಮರೆಯ ಕಾಯಿಯಂತಿರುವ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಗುರುತಿಸುವ ಕಾರ್ಯ ಮಾಡುವ ಜೊತೆಯಲ್ಲಿಯೇ ಹಿರಿಯ ಕಲಾವಿದರಿಗೂ ಗೌರವಿಸುವ ಕೆಲಸ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡೊಳ್ಳಿನ ಕುಣಿತ, ಪುರವಂತರ ಸೇವೆ, ಹಗಲು ವೇಶ, ಗಾರುಡಿಗೊಂಬೆ, ಭರತನಾಟ್ಯ ಸೇರಿದಂತೆ 20ಕ್ಕೂ ಹೆಚ್ಚು ಕಲೆಗಳ ಪ್ರದರ್ಶನ ಗಮನ ಸೆಳೆಯಿತು.
ಮುದನೂರ ಕಂಠಿ ಮಠದ ಸಿದ್ಧ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಬಸಯ್ಯಸ್ವಾಮಿ ಹಿರೇಮಠ, ಮಹಾಲಿಂಗಯ್ಯ ಮಠಪತಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ಎಪಿಎಂಸಿ ಅಧ್ಯಕ್ಷ ದೇವಣ್ಣ ಮಲಗಲದಿನ್ನಿ, ಸಂಗನಗೌಡ ಪಾಟೀಲ ವಜ್ಜಲ, ಸುರೇಶ ಸಜ್ಜನ್, ಬಾಬುಗೌಡ ಅಗತೀರ್ಥ, ಸಿದ್ದನಗೌಡ ಕರಿಬಾವಿ, ಬಿಜೆಪಿ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಇದ್ದರು.
ಇದೇ ಸಂದರ್ಭದಲ್ಲಿ ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು. ಎಸ್.ಎಂ. ಭಕ್ತಕುಂಬಾರ ನಿರೂಪಿಸಿದರು. ಮಲ್ಲು ಚಾಂದಕವಟೆ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.