ಬಿಡದಿ: ನ. 21ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಡಿ. ಕೃಷ್ಣಮೂರ್ತಿ ಸ್ವರ್ಧಿಸಿದ್ದು, ಭಾನುವಾರ ಬಿಡದಿ ಹೋಬಳಿಯಾದ್ಯಂತ ಮತಯಾಚಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ರೇಷ್ಮೆ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದು ವಯೋನಿವೃತ್ತಿ ಹೊಂದಿದ್ದೇನೆ. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದೇನೆ. ರಾಜ್ಯಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದೇನೆ. ಕನ್ನಡ ಸೇವೆ ಮಾಡಲು ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ತಿಳಿಸಿದರು.
ಮಾತೃಭಾಷೆಯ ಶಿಕ್ಷಣಕ್ಕಾಗಿ ಒತ್ತು ನೀಡುವುದು, ಸರ್ಕಾರಿ ಶಾಲೆಗಳ ಸಬಲೀಕರಣ, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಈಗಿರುವ ಸರ್ಕಾರಿ ಶಾಲೆಗಳನ್ನು ಕೇಂದ್ರೀಕರಿಸಿ ಕನ್ನಡ ಮಾಧ್ಯಮ ಶಾಲೆ ತೆರೆಯುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಕನ್ನಡ ನೆಲ, ಜಲ ಭಾಷೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಹೊಸ ಶಿಕ್ಷಣ ನೀತಿ ಪ್ರಕಟಿಸಿದೆ. ಅದರಲ್ಲಿ ಅನೇಕ ಸ್ವಾಗತಾರ್ಹ ಅಂಶಗಳಿವೆ. ಆದರೆ, ಶಿಕ್ಷಣ ಮಾಧ್ಯಮ ವಿಚಾರವಾಗಿ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕೊಡಬೇಕೆಂದು ಕಡ್ಡಾಯಗೊಳಿಸಲು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.