ಕೆಂಭಾವಿ: ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಡೆಯುತ್ತಿದ್ದ ಕಟ್ಟಡ ಕಾಮಗಾರಿಯನ್ನು ಪುರಸಭೆ ಸಿಬ್ಬಂದಿ ಜೆಸಿಬಿಯಿಂದ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ.
ಪಟ್ಟಣದ ಸರ್ವೇ.ನಂ 600/1ರಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಮಾಲೀಕರಿಗೆ ಮೂರು ಬಾರಿ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ಕಾಮಗಾರಿ ಮುಂದುವರಿಸಿದ್ದರಿಂದ ಮುಖ್ಯಾಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದು ತೆರವು ಕಾರ್ಯ ಆರಂಭಿಸಿದ್ದಾರೆ.
ಅನಧಿಕೃತವಾಗಿ ಖಾತಾ ನಕಲುಗಳನ್ನು ಪಡೆದ ನೋಂದಣಿಗಳನ್ನು ಜಿಲ್ಲಾಧಿಕಾರಿಗಳು ಈಗಾಗಲೇ ರದ್ದುಪಡಿಸಿದ್ದಾರೆ. ನಿಯಮಬಾಹಿರವಾಗಿ ಕೇವಲ ಕೃಷಿಯೇತರ ಆದೇಶವನ್ನು ಪಡೆದು ಆದೇಶದಲ್ಲಿನ ಷರತ್ತಿನಂತೆ ವಿನ್ಯಾಸ ನಕ್ಷೆಯನ್ನು ತಯಾರಿಸದೆ ಅನುಮೋದನೆ ಪಡೆಯದೆ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವದು ಕಂಡುಬಂದಿದ್ದರಿಂದ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಅದಕ್ಕೂ ಕಾಮಗಾರಿ ನಿಲ್ಲಿಸದಿದ್ದಕ್ಕೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ತೆರವು ಕಾರ್ಯದಲ್ಲಿ ಮುಖ್ಯಾಧಿಕಾರಿ ಜತೆ ಪುರಸಭೆ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿದ್ದರು.
ಕೇವಲ ಸರ್ವೇ.600/1ರಲ್ಲಿ ಮಾತ್ರವಲ್ಲದೆ ಪಟ್ಟಣದ ಅನೇಕ ಕಡೆ ಅನಧಿಕೃತವಾಗಿ ಕಟ್ಟಡ ಕಾಮಗಾರಿ ನಡೆಯುತ್ತಿವೆ. ಕೆಲವಡೆ ಮೂರು ಅಂತಸ್ತಿನ ಕಟ್ಟಡಗಳನ್ನು ಸಹ ನಿರ್ಮಿಸಲಾಗುತ್ತಿದೆ. ಅವರು ಯಾರ ಅನುಮತಿ ಪಡೆದಿದ್ದಾರೆ ಎಂಬುದು ತಿಳಿಯದು. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಎಲ್ಲರ ವಿರುದ್ಧ ಪುರಸಭೆ ಅಧಿಕಾರಿಗಳು ಇದೆ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.