
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಯೋಜನೆಯ 2025-26 ನೇ ಸಾಲಿನ 6 ಕೋಟಿ ವೆಚ್ಚದ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡಗಳ ಸಿಸಿ ರಸ್ತೆ, ಚರಂಡಿ ಹಾಗೂ ವಿದ್ಯುತ್ತೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಕೆಂಭಾವಿ: ‘ಬಿಜೆಪಿಯವರು ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸಾಗುತ್ತಿದ್ದು, ನುಡಿದಂತೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಸೋಮವಾರ ಪಟ್ಟಣದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ ವತಿಯಿಂದ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಯೋಜನೆಯ 2025-26 ನೇ ಸಾಲಿನ ₹ 6 ಕೋಟಿ ವೆಚ್ಚದ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳ ಸಿಸಿ ರಸ್ತೆ, ಚರಂಡಿ ಹಾಗೂ ವಿದ್ಯುತ್ತೀಕರಣ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
‘ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಹಕರಿಸದಿದ್ದರೂ, ನಾವು ಡಿಬಿಟಿ ಮೂಲಕ ಹಣ ನೀಡುತ್ತಿದ್ದೇವೆ. ಶೀಘ್ರದಲ್ಲೇ ಅಕ್ಕಿಯ ಬದಲಾಗಿ ಬೇಳೆ, ಸಕ್ಕರೆ, ಉಪ್ಪು ಮತ್ತು ಎಣ್ಣೆಯನ್ನೊಳಗೊಂಡ ಇಂದಿರಾ ಕಿಟ್ ನೀಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆಯಾಗಿದ್ದು, ಶೀಘ್ರ ಜಾರಿಗೆ ಬರಲಿದೆ’ ಎಂದರು.
‘ಮಲ್ಲಾ ಕ್ರಾಸ್ ದಿಂದ ಕೆಂಭಾವಿ ವರೆಗಿನ ₹12 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ.
ಕೆಂಭಾವಿ- ತಿಪನಟಗಿ ಕ್ರಾಸ್ ರಸ್ತೆಗೆ ₹ 8 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಟೆಂಡರ್ ಹಂತದಲ್ಲಿದೆ.
ಧಾರ್ಮಿಕ ಕೇಂದ್ರಗಳು ಮತ್ತು ಸಮುದಾಯ ಭವನಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡಲಾಗಿದೆ’ ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಾಮನರಾವ್ ದೇಶಪಾಂಡೆ ಪ್ರಾಸ್ತಾವಿಕ ಮಾತನಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ ಪಾಟೀಲ, ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪೊಲೀಸ್ ಪಾಟೀಲ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಶಿವಮಹಾಂತ ಚಂದಾಪುರ, ಬಾಪುಗೌಡ ಪಾಟೀಲ ಅಗತೀರ್ಥ, ಬಸನಗೌಡ ಹೊಸಮನಿ, ಬಸವರಾಜ ಚಿಂಚೋಳಿ, ಮುಖ್ಯಾಧಿಕಾರಿ ಮಹ್ಮದ್ ಯೂಸೂಫ್, ಪುರಸಭೆ ಮಾಜಿ ಅಧ್ಯಕ್ಷ ರಹಿಮಾನ ಪಟೇಲ್ ಯಲಗೋಡ, ಖಾಜಾಪಟೇಲ ಕಾಚೂರ, ಸಹಾಯಕ ಅಭಿಯಂತರ ಬಾಪುಗೌಡ ಪಾಟೀಲ್, ಸಂಗನಗೌಡ ಮರಡ್ಡಿ, ಹಣಮಂತ್ರಾಯ ಮಾನಸುಣಗಿ, ಪುರಸಭೆ ಸರ್ವ ಸದಸ್ಯರು ಪಕ್ಷದ ಕಾರ್ಯಕರ್ತರು ಇತರರು ಇದ್ದರು. ಪರಶುರಾಮ ಸ್ವಾಗತಿಸಿದರು, ಬಂದೇನಾವಾಜ ನಾಲತವಾಡ ನಿರೂಪಿಸಿ ವಂದಿಸಿದರು.
ಕೆಂಭಾವಿ ಪಟ್ಟಣಕ್ಕೆ ಸುಮಾರು ₹ 48 ಕೋಟಿ ವೆಚ್ಚದಲ್ಲಿ 3 ಓವರ್ ಹೆಡ್ ಟ್ಯಾಂಕ್ಗಳು ಮತ್ತು ಹೊಸ ಪೈಪ್ಲೈನ್ ಅಳವಡಿಸುವ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಇದರ ಮೂಲಕ ಸುಮಾರು 4050 ಮನೆಗಳಿಗೆ ನಲ್ಲಿ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿದ್ದರೆ ಮಾತ್ರ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರಲು ಸಾಧ್ಯ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.