ADVERTISEMENT

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ದತ್ತಾತ್ರೇಯ ಪಾಟೀಲ ರೇವೂರ ತಾಕೀತು

ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ದತ್ತಾತ್ರೇಯ ಪಾಟೀಲ ರೇವೂರ ತಾಕೀತು

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 2:35 IST
Last Updated 28 ಜನವರಿ 2021, 2:35 IST
ಯಾದಗಿರಿಯಲ್ಲಿ ನಡೆದ ಕೆಕೆಆರ್‌ಡಿಬಿ ಸಭೆಯಲ್ಲಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿದರು
ಯಾದಗಿರಿಯಲ್ಲಿ ನಡೆದ ಕೆಕೆಆರ್‌ಡಿಬಿ ಸಭೆಯಲ್ಲಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿದರು   

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಮಂಡಳಿ ಯೋಜನೆಯ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಬಾಕಿ
ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದತ್ತಾತ್ರೇಯ ಪಾಟೀಲ ರೇವೂರ ತಾಕೀತು ಮಾಡಿದರು.

ಬುಧವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತಅವಧಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗದೆ ಇದ್ದಲ್ಲಿ ಅನುದಾನ ವಾಪಾಸ್ ನೀಡಿ, ಏಜೆನ್ಸಿ ಬದಲಾಯಿಸಿ ಬೇರೆ ಏಜೆನ್ಸಿಗೆ ಕಾಮಗಾರಿಯ ನಿರ್ವಹಿಸಲು ಗುತ್ತಿಗೆ ನೀಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

ADVERTISEMENT

ನಿರ್ಮಿತಿ ಕೇಂದ್ರ ಹಾಗೂ ಕ್ಯಾಶುಟೆ ಕ್‍ಗೆ ವಹಿಸಿದ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲವೆಂದು ಹಲವು ಶಾಸಕರು ಈ ಇಲಾಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಏಜಿನ್ಸಿಯವರು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಿ ಅನುದಾನ ವಾಪಸ್ ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಬೋರ್ಡ್ ಎಂದರೆಎಟಿಎಂ ಮಷಿನ್ ಎಂದು ಭಾವಿಸಿದ್ದಿರಿ ಏನು? ನಿಮ್ಮ ಮನಸಿಗೆ ಬಂದಾಗ ಹಣ ಡ್ರಾ ಮಾಡಿಕೊಂಡು ಬೇಕಾಬಿಟ್ಟಿಬಳಕೆ ಮಾಡಿಕೊಂಡರೆ ಯಾರು ಕೇಳುವುದಿಲ್ಲವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಮಂಡಳಿ ಸ್ಥಾಪಿಸಿರುವ ಉದ್ದೇಶ ಅರಿತುಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಂಡಳಿ ಸ್ಥಾಪಿಸಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕಾಗಿದೆ. ಕಾಮಗಾರಿ ಬಗ್ಗೆ ಅಸಡ್ಡೆ ಧೋರಣೆ ಅನುಸರಿಸಿರುವುದು ಸರಿಯಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಳಾಂಗಣ ಮತ್ತು ಹೋರಾಂಗಣ ಕ್ರೀಡಾಂಗಣ ಕಾಮಗಾರಿ ಆಮೆಗತಿಯಲ್ಲಿ ನಡೆದಿದ್ದು, ಕ್ರೀಡಾಪಟುಗಳು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಒಳಾಂಗಣದ ಕ್ರೀಡಾಂಗಣದಲ್ಲಿ ಬಾಕಿಯಿರುವ ಕಾಮಗಾರಿ ಪೂರ್ಣಗೊಳಿಸಿ, ಒಳಚರಂಡಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ನೀರು ಸರಾಗವಾಗಿ ಹರಿಯುವಂತೆ ಮಾಡಬೇಕಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ 513 ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಅದರಲ್ಲಿ 456 ಕಾಮಗಾರಿಗಳು ಪೂರ್ಣಗೊಂಡಿವೆ. 47 ಕಾಮಗಾರಿಗಳ ಕಾರ್ಯ ಪ್ರಗತಿಯಲ್ಲಿದೆ. ಇನ್ನು ನಿರ್ಮಿತಿ ಕೇಂದ್ರಗಳಲ್ಲಿ 292 ರ ಕಾಮಗಾರಿಗಳಲ್ಲಿ 272 ಕಾಮಗಾರಿಗಳು ಮುಕ್ತಾಯಗೊಂಡಿವೆ. 20 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನುಳಿದ ಇಲಾಖೆಗಳ ಕಾಮಗಾರಿಗಳು ಶೀಘ್ರ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕೆಂದು ನಿರ್ದೇಶನನೀಡಿದರು.

ಶಾಸಕ ರಾಜೂಗೌಡ, ಶಾಸಕ ವೆಂಕಟರೆಡ್ಡಿ,ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಉಪಾಧ್ಯಕ್ಷೆ ಗಿರಿಜಮ್ಮ ರೊಟ್ನಡಗಿ,ಕೆಕೆಆರ್‌ಡಿಬಿ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಜಿ.ಪಂಉಪ ಕಾರ್ಯದರ್ಶಿ ಮುಕ್ಕಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.