
ಯಾದಗಿರಿ: ‘ಕಾರ್ಮಿಕ ಇಲಾಖೆಯ ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕ ಕಾರ್ಡ್ ನೋಂದಣಿ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.
ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.
‘ಕಾರ್ಮಿಕರಿಗಾಗಿ ಸರ್ಕಾರದ ಜಾರಿಗೆ ತಂದಿರುವ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೋಂದಣಿ ಮಾಡಿಕೊಳ್ಳುವುದು ಅಗತ್ಯ. ಇದರಿಂದ ಎಲ್ಲ ಬಗೆಯ ಯೋಜನೆಗಳನ್ನು ನೇರವಾಗಿ ಪಡೆಯಲು ಅನುಕೂಲ ಆಗಲಿದೆ’ ಎಂದರು.
‘ಜೀವಕ್ಕಿಂತ ದೊಡ್ಡ ವಸ್ತು ಬೇರೊಂದು ಇಲ್ಲ. ಕಾರ್ಮಿಕರು ಕೆಲಸದ ವೇಳೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸುರಕ್ಷಿತಾ ಕಿಟ್ಗಳನ್ನು ಸದ್ಬಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಕಾರ್ಮಿಕರೊಬ್ಬರು ತಮಗೆ ಇಲಾಖೆಯಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಶಾಸಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಕಾರ್ಮಿಕರ ಅರ್ಜಿಯನ್ನು ಪರಿಗಣಿಸಿ, ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರ್ ಮಾತನಾಡಿ, ‘ಸುರಕ್ಷಿತಾ ಕಿಟ್ನಲ್ಲಿ ಹೆಲ್ಮೆಟ್, ಗ್ಲೌಸ್, ಶೂ, ಸಾಕ್ಸ್, ಕನ್ನಡಕಗಳಿವೆ. ಜಿಲ್ಲೆಯ 600ಕ್ಕೂ ಹೆಚ್ಚು ಕಾರ್ಮಿಕರಿಗೆ ಸುರಕ್ಷಿತಾ ಕಿಟ್ ಬಂದಿವೆ’ ಎಂದರು.
ಈ ವೇಳೆ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ವೆಂಕಟೇಶ, ಪ್ರಶಾಂತ ಸೇರಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.