
ಯಾದಗಿರಿ: ಜಿಲ್ಲೆಯಲ್ಲಿ ಫೆಬ್ರುವರಿ 13ರವರೆಗೆ ನಡೆಯುವ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದರ ಅವರು ಸೋಮವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಡಾ.ಮಹೇಶ ಬಿರಾದರ, ‘ತಾರತಮ್ಯವನ್ನು ಕೊನೆಗೊಳಿಸಿ, ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಜ್ಞೆ ಮಾಡಿ ಕುಷ್ಠರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈ ಜೋಡಿಸಬೇಕು’ ಎಂದರು.
ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ‘ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಮತ್ತು ಶಾಲಾ ಕಾಲೇಜುಗಳು, ಜಾತ್ರೆ, ಸಂತೆಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು’ ಎಂದು ಹೇಳಿದರು.
‘ಚರ್ಮದ ಮೇಲೆ ತಿಳಿ, ಬಿಳಿ, ತಾಮ್ರ ಬಣ್ಣದ ಮಚ್ಚೆ, ದಪ್ಪನಾದ ಎಣ್ಣೆ ಪಸರಿಸಿದಂತಹ ಹೊಳೆಯುವ ಚರ್ಮ, ದೇಹದ ಮೇಲಿನ ಗಂಟುಗಳು, ಕಣ್ಣಿನರೆಪ್ಪೆಗಳನ್ನು ಮುಚ್ಚುವಲ್ಲಿ ತೊಂದರೆ, ವಾಸಿಯಾಗದ ಗಾಯಗಳು,ಬೆರಳು ಮಡಿಚಿಕೊಂಡಿರುವುದು ಕುಷ್ಠರೋಗದ ಲಕ್ಷಣಗಳಾಗಿವೆ’ ಎಂದರು.
ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಭಗವಂತ ಅನವಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಿಪಾಲರೆಡ್ಡಿ, ಡಿವೈಎಚ್ಇಒ ಜಗನ್ನಾಥ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಜ್ಯೋತಿ ಕಟ್ಟಿಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ, ಭಾಗಪ್ಪ ಕೋರೆ, ಬಸಯ್ಯ ಗುತ್ತೇದಾರ, ಜಗದೀಶ ಕುರುಕುಂದಿ, ನಾಗರಾಜ ಉಪಸ್ಥಿತರಿದ್ದರು. ತುಳಿಸಿರಾಮ ನಿರೂಪಿಸಿದರು. ಶಿವಶರಣಯ್ಯ ಗದ್ದಿಗಿ ವಂದನಾರ್ಪಣೆ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.