ADVERTISEMENT

ಡೆಂಗಿ ಹರಡದಂತೆ ಮನೆ ಸುತ್ತ ಸ್ವಚ್ಛತೆ ಕಾಪಾಡಿ

ಡೆಂಗಿ ರೋಗದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತೆ ಅಗತ್ಯ: ಡಾ.ಸೂರ್ಯಪ್ರಕಾಶ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 16:18 IST
Last Updated 28 ಜುಲೈ 2020, 16:18 IST
ಡೆಂಗಿ ವಿರೋಧಿ ಮಾಸಾಚರಣೆ-2020 ಕುರಿತಂತೆ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸೂರ್ಯಪ್ರಕಾಶ ಎಂ.ಕಂದಕೂರ ಮಾತನಾಡಿದರು
ಡೆಂಗಿ ವಿರೋಧಿ ಮಾಸಾಚರಣೆ-2020 ಕುರಿತಂತೆ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸೂರ್ಯಪ್ರಕಾಶ ಎಂ.ಕಂದಕೂರ ಮಾತನಾಡಿದರು   

ಯಾದಗಿರಿ: ಮಾರಕವಾದ ಡೆಂಗಿರೋಗದಿಂದ ತಪ್ಪಿಸಿಕೊಳ್ಳಲು ಸ್ವಚ್ಛತೆಯೊಂದೇ ಪರಿಹಾರವಾಗಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ತಮ್ಮ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸೂರ್ಯಪ್ರಕಾಶ ಎಂ.ಕಂದಕೂರ ಮನವಿ ಮಾಡಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಾರ್ಯಾಲಯದ ವತಿಯಿಂದ ಮಂಗಳವಾರಹಮ್ಮಿಕೊಂಡಿದ್ದ ಡೆಂಗಿವಿರೋಧಿ ಮಾಸಾಚರಣೆ-2020 ಕುರಿತಂತೆ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡೆಂಗಿವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ, ಆರೋಗ್ಯ ಉಪಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ, ನೀರು ಸಂಗ್ರಹಣ ತೊಟ್ಟಿಗಳನ್ನು ಪರೀಕ್ಷಿಸಿ ಲಾರ್ವಾ ಕಂಡುಬಂದಲ್ಲಿ ವಾರಕ್ಕೆರಡು ಬಾರಿ ಸ್ವಚ್ಛಗೊಳಿಸಲು ತಿಳಿಸುವ ಜೊತೆಗೆ ಆರೋಗ್ಯ ಶಿಕ್ಷಣ ನೀಡುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ಮಾರಕವಾದ ಡೆಂಗಿರೋಗವು ಈಡಿಸ್ ಈಜೀಪ್ಟಿ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು 7 ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಡೆಂಗಿಹಾಗೂ ಚಿಕೂನ್‍ಗುನ್ಯಾರೋಗಗಳು ವೈರಾಣುವಿನಿಂದ ಬರುವ ಕಾಯಿಲೆಗಳು. ಡೆಂಗಿಜ್ವರ ಮಾರಕವಾದರೆ, ಚಿಕೂನ್‍ಗುನ್ಯಾ ಮಾರಣಾಂತಿಕವಲ್ಲ. ರೋಗ ಖಚಿತಪಟ್ಟಲ್ಲಿ ಕೇವಲ ಪ್ಯಾರಾಸಿಟಮಲ್ ಮಾತ್ರೆಗಳನ್ನೇ ಉಪಯೋಗಿಸಬೇಕು. ಯಾವುದೇ ಕಾರಣಕ್ಕೂ ಅಸಪ್ರೀನ್, ಬ್ರೋಪಿನ್ ಮಾತ್ರೆಗಳನ್ನು ಬಳಸಬಾರದು ಎಂದು ಸಲಹೆ ನೀಡಿದರು.

ಹಿರಿಯ ಆರೋಗ್ಯ ಸಹಾಯಕ ಶರಣಯ್ಯ ಸ್ವಾಮಿ, ಜಿಲ್ಲಾ ವಿಬಿಡಿ ಸಮಾಲೋಚಕ ಬಸವರಾಜ ಕಾಂತಾ ಇದ್ದರು.

***

ಡೆಂಗಿಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ತೀವ್ರಜ್ವರ ಕಂಡುಬಂದಲ್ಲಿ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯಬೇಕು

- ಡಾ.ಸೂರ್ಯಪ್ರಕಾಶ ಎಂ.ಕಂದಕೂರ,ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.