ಸಿದ್ದರಾಮಯ್ಯ
ಪ್ರಜಾವಾಣಿ ಚಿತ್ರ
ಯಾದಗಿರಿ: ಮುಂಬರುವ ಬಜೆಟ್ನಲ್ಲಿ ಮೇದಾರ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 250 ಕೋಟಿ ಅನುದಾನ ಮೀಸಲಿಡಬೇಕು ಎಂದು ಮೇದಾರ ಯುವ ಘಟಕದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ್ ಲಿಂಗೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಾಗರ್ ಮುಂಡರಗಿ ಸೇರಿ ಇತರರು ಮನವಿ ಪತ್ರ ಸಲ್ಲಿಕೆ ಮಾಡಿದರು.
ರಾಜ್ಯದಲ್ಲಿ ಮೇದಾರ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅತಿ ನಿರ್ಗತಿಕರೂ ಆಗಿದ್ದಾರೆ. ಹಲವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈಗ ನೀಡುತ್ತಿರುವ ಅನುದಾನವೂ ಸಾಲುತ್ತಿಲ್ಲ. ಪರಿಶಿಷ್ಟ ಪಂಗಡದಲ್ಲಿ ಇರುವ ಈ ಸಮುದಾಯಕ್ಕೆ ₹ 250 ಕೋಟಿ ಮೀಸಲಿಡಬೇಕು ಎಂದು ಕೋರಿದ್ದಾರೆ.
ಸಮುದಾಯದ ಕುಲ ಪುರುಷ ಮೇದಾರ ಕೇತೇಶ್ವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು. ಸಮುದಾಯದ ಬಹುತೇಕರು ಅರಣ್ಯ ಅಂಚಿನ ಆದಿವಾಸಿಗಳಾಗಿದ್ದು, ಪೌಷ್ಟಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.