ಯಾದಗಿರಿ: ತಾಲ್ಲೂಕಿನ ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದ ನೂತನ ತರಬೇತಿ ಕೇಂದ್ರ ಸಂಕೀರ್ಣವನ್ನು ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಭಾನುವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಯುವಕ, ಯುವತಿಯರಿಗೆ ಕೌಶಲ ಅವಶ್ಯವಿದೆ. ಕೌಶಲವಿದ್ದರೆ ಬದಲಾವಣೆ ಸಾಧ್ಯ. ಹೀಗಾಗಿ ಎಲ್ಲರೂ ಕೌಶಲ ರೂಢಿಸಿಕೊಳ್ಳಿ ಎಂದರು.
ಪ್ರತಿಯೊಬ್ಬರೂಉದ್ಯೋಗ ಗಿಟ್ಟಿಸಿಕೊಳ್ಳಲು ಆಯಾ ಕ್ಷೇತ್ರದಲ್ಲಿ ಕೌಶಲ ಹೊಂದಬೇಕಿದ್ದು ಅವಶ್ಯ. ಕೌಶಲ ಹೊಂದಿದ್ದರೆ ಉದ್ಯೋಗದ ಅವಕಾಶ ಸಿಗಲಿದೆ ಎಂದರು.
ರಾಜ್ಯದಲ್ಲಿ ಕೌಶಲಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲಾಗುತ್ತಿದೆ. ಈ ಸಂಸ್ಥೆಗೆ ಸಾಕಷ್ಟು ಬೇಡಿಕೆ ಇದೆ. ಪ್ರತಿಯೊಬ್ಬ ವ್ಯಕ್ತಿ ಸಮಾಜಕ್ಕೆ ಸೇವೆ ಸಲ್ಲಿಸಲು ಕೌಶಲ ಅತಿ ಮುಖ್ಯವಾಗಿದೆ. ಕೌಶಲ ಪಡೆದಾಗ ಜೀವನ ಸಬಲೀಕರಣವಾಗುತ್ತದೆ ಎಂದು ತಿಳಿಸಿದರು.
21ನೇ ಶತಮಾನಕ್ಕೆ ತಕ್ಕಂತೆ ತಂತ್ರಜ್ಞಾನ ಆಧಾರಿತ ಕಲಿಕೆ ಅವಶ್ಯವಿದೆ. ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ 120 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ದೀರ್ಘಾವಧಿ ಮತ್ತು ಅಲ್ಪಾವಧಿ ಕೋರ್ಸ್ ಗಳಿದ್ದು, ವಾರ್ಷಿಕ 500 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಲಾಗುವುದು ಎಂದರು.
ಈ ವೇಳೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ, ಶಹಾಪುರ ಕೃಷ್ಣಾ ಕಾಡಾ ಭೀಮರಾಯನಗುಡಿ ಅಧ್ಯಕ್ಷ ಶರಣಪ್ಪ ಆರ್ ತಳವಾರ, ಕಡೇಚೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಚಂದ್ರಶೇಖರ್, ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.