ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಹಲವಾರು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೇ 93ರಷ್ಟು ಸಕಾಲದಲ್ಲಿ ಕೂಲಿ ಪಾವತಿಯಾಗಿದೆ.
ಜಿಲ್ಲೆಯಲ್ಲಿ ಅತಿ ಹೆಚ್ಚು ವಲಸೆ ಕುಟುಂಬಗಳು ಉದ್ಯೋಗ ಖಾತ್ರಿಯಲ್ಲಿ ಕೆಲಸದಲ್ಲಿ ತೊಡಿಸಿಕೊಂಡಿದ್ದಾರೆ. ಸಕಾಲದಲ್ಲಿ ಸಂಬಳ ನೀಡುವುದರಿಂದ ಕೂಲಿಕಾರರು ಹೆಚ್ಚು ಬರುತ್ತಿದ್ದಾರೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
‘ಕೆರೆ ಹೂಳೆತ್ತುವುದು, ಕಲ್ಯಾಣಿ ಪುನಶ್ಚೇತನ, ಬದು ನಿರ್ಮಾಣ ಸೇರಿದಂತೆ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದೆ. ಬೇರೆ ಜಿಲ್ಲೆಗಳಂತೆ ಕೂಲಿ ಬಾಕಿ ಉಳಿಸಿಕೊಂಡಿಲ್ಲ’ ಎನ್ನುತ್ತಾರೆ ನರೇಗಾ ಜಿಲ್ಲಾ ನೋಡಲ್ ಅಧಿಕಾರಿ ಮುಕ್ಕಣ್ಣ
ಕರಿಗಾರ ಅವರು.
‘ವಾರವಾರಕ್ಕೆ ಎನ್ಆರ್ಎಂ ಮುಕ್ತಾಯ ಮಾಡಬೇಕಾಗಿರುವುದ ರಿಂದ ವಾರವಾರಕ್ಕೆ ಪ್ರಗತಿ ಮಾಡಲಾಗುತ್ತಿದೆ. ಇದರಿಂದ ಕೂಲಿಕಾರರ ಹಣ ಉಳಿಸಿ ಕೊಳ್ಳುವ ಪ್ರಶ್ನೆ ಬರುವುದಿಲ್ಲ. ಹೀಗಾಗಿ ಬೇರೆ ಜಿಲ್ಲೆಗಳಿಗೆ ಹೊಲಿಸಿದರೆ ನಮ್ಮ ಜಿಲ್ಲೆಯಲ್ಲಿ ಅತಿ ಹೆಚ್ಚು ಪಾವತಿಯಾಗಿದೆ’ ಎನ್ನುತ್ತಾರೆ ಅವರು.
ಏಪ್ರಿಲ್ ತಿಂಗಳಿನಿಂದ ಆಗಸ್ಟ್ ವರೆಗೆ17.57 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ. ಜಿಲ್ಲೆಯ59,725 ಕುಟುಂಬಗಳಿಗೆ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲಾಗಿದೆ.
2019–20ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯು ನರೇಗಾ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿತ್ತು. ಕೂಲಿಕಾರಿಗೆ ₹275 ಕೂಲಿ ನೀಡಲಾಗುತ್ತಿದ್ದು, ಸಲಕರಣೆಗಳಿಗಾಗಿ ₹10 ಸೇರಿ ₹285 ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಬೇರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಕಾರ್ಮಿಕರು ಬಂದಿದ್ದರು. ಅವರಿಗೆ ಉದ್ಯೋಗ ಖಾತ್ರಿಯೇ ಆಸರೆ. ಕೋವಿಡ್ ಹಿನ್ನೆಲೆ ಕೆಲಸದ ಸ್ಥಳಗಳಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.