
ಯಾದಗಿರಿ: ಸುರಪುರ ತಾಲ್ಲೂಕಿನ ತಿಂಥಣಿ ಮೌನೇಶ್ವರ ಜಾತ್ರೆಯು ಜನವರಿ 28ರಿಂದ ಫೆಬ್ರವರಿ 2ರವರೆಗೆ ನಡೆಯಲಿದ್ದು, ಕ್ಷೇತ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕಾರ್ಮಿಕ ಯೂನಿಯನ್ ಹಾಗೂ ವಿಶ್ವಕರ್ಮ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತಿಂಥಣಿಯ ಮೌನೇಶ್ವರ ಕ್ಷೇತ್ರವೂ ಒಂದಾಗಿದೆ. ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರರಾಜ್ಯಗಳಿಂದ ಭಕ್ತರು ಬರುತ್ತಾರೆ. ಹೀಗಾಗಿ, ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಆಕರ್ಷಕ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದಿದ್ದಾರೆ.
ಜಾತ್ರೆಗೆ ಲಕ್ಷಾಂತರ ಭಕ್ತರು ಬಂದು ಸೇರುತ್ತಾರೆ. ಮೂಲಸೌಕರ್ಯಕ್ಕಾಗಿ ಪ್ರತಿ ವರ್ಷ ಮನವಿ ಮಾಡಿಕೊಂಡರೂ ಬಂದಂತಹ ಭಕ್ತರಿಗೆ ತೊಂದರೆ ಆಗುತ್ತಲೇ ಇದೆ. ಈ ವರ್ಷವಾದರೂ ಮುಂಚಿತವಾಗಿ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.
ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ವಿಶೇಷ ಬಸ್ ವ್ಯವಸ್ಥೆ, ಕಾಳಿಕಾದೇವಿ ದೇವಸ್ಥಾನ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಅನಗತ್ಯ ಅಂಗಡಿಗಳಿಗೆ ಕಡಿವಾಣ ಹಾಕಬೇಕು. ಪೂಜೆ, ಸಂಗೀಕ ಕಾರ್ಯಕ್ರಮಗಳಿಗೆ ಅನುಗುಣವಾಗಿ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.
ಈ ವೇಳೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲಾಧ್ಯಕ್ಷ ಮಹೇಶ್ ವಿಶ್ವಕರ್ಮ ತಡಿಬಿಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ವಿಶ್ವಕರ್ಮ, ತಾಲ್ಲೂಕು ಅಧ್ಯಕ್ಷ ದೇವಿಂದ್ರಪ್ಪ ವಿಶ್ವಕರ್ಮ, ಜಿಲ್ಲಾ ಗೌರವಾಧ್ಯಕ್ಷ ಶಿವಣ್ಣ ಉನೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.