ಸುರಪುರ: ‘ಪ್ರಜಾಪ್ರಭುತ್ವದ ಯಶಸ್ಸು ಮತದಾರರನ್ನು ಅವಲಂಬಿಸಿದ್ದು, ಸಂವಿಧಾನದತ್ತವಾಗಿ ಪಡೆದ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಸುಭದ್ರ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ನ್ಯಾಯಾಧೀಶ ಚಿದಾನಂದ ಬಡಿಗೇರ ಹೇಳಿದರು.
ಇಲ್ಲಿನ ಪ್ರಭು ಕಾಲೇಜಿನಲ್ಲಿ ತಾಲ್ಲೂಕಾಡಳಿತ ಮಂಗಳವಾರ ಆಯೋಜಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮತದಾರರನ್ನು ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಉತ್ತೇಜಿಸುವುದು ಈ ದಿನದ ಧ್ಯೇಯವಾಗಿದೆ. ವಿಶೇಷವಾಗಿ ಯುವಕರು ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಪ್ರೋತ್ಸಾಹಿಸಲಾಗುತ್ತದೆ’ ಎಂದರು.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ‘ಯುವಕರು ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ. ಎಲ್ಲರೂ ಮತದಾ ರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾ ಯಿಸಿ, ತಮ್ಮ ಹಕ್ಕು ಚಲಾಯಿಸಿದರೆ ಸುಭದ್ರ, ಸುಸ್ಥಿರ, ಬಲಿಷ್ಠ ಸರ್ಕಾರ ಮತ್ತು ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ’ ಎಂದರು.
ಪ್ರೊ. ವೇಣುಗೋಪಾಲನಾಯಕ ಜೇವರ್ಗಿ ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಮತದಾನದ ಮಹತ್ವ ಮತ್ತು ಜವಾಬ್ದಾರಿ ಕುರಿತು ತಿಳಿಸಿದರು.
ಪ್ರಾಚಾರ್ಯ ಡಾ. ಎಸ್.ಎಚ್. ಹೊಸ್ಮನಿ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಮೂಡಲದಿನ್ನಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.
ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್, ಪಿಯು ಕಾಲೇಜು ಪ್ರಾಂಶುಪಾಲ ಪ್ರೊ. ಎಂ.ಡಿ.ವಾರೀಸ್, ಬಿಇಒ ಮಹಾದೇವರೆಡ್ಡಿ, ಎಪಿಪಿ ರಾಘವೇಂದ್ರ ಜಹಗೀರದಾರ್ ಇದ್ದರು.
5 ಯುವ ಮತದಾರರಿಗೆ ಎಪಿಕ್ ಕಾರ್ಡ್ ಅನ್ನು ಸಾಂಕೇತಿಕವಾಗಿ ವಿತರಿಸ ಲಾಯಿತು. ಉತ್ತಮ ಬಿಎಲ್ಒಗಳಾಗಿ ಕಾರ್ಯ ನಿರ್ವಹಿಸಿದವರಿಗೆ ಸನ್ಮಾನಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.