ಯಾದಗಿರಿ: ‘ಏಡ್ಸ್ ರೋಗವು ಎಚ್ಐವಿ ವೈರಸ್ನಿಂದ ಬರುವ ಕಾಯಿಲೆಯಾಗಿದ್ದು, ಈ ವೈರಸ್ ಮನುಷ್ಯನ ದೇಹದಲ್ಲಿ ಮಾತ್ರ ಬದುಕುತ್ತದೆ. ಏಡ್ಸ್ಗೆ ಔಷಧಿ ಇಲ್ಲದ್ದರಿಂದ ಈ ರೋಗ ಹರಡುವ ವಿಧಾನಗಳ ಬಗ್ಗೆ ಪ್ರತಿಯೊಬ್ಬರೂ ಅರಿತು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೊಡೆ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿ ನೂತನ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್ಷೆನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಜಾಥಾ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಎಚ್ಐವಿ ಸೋಂಕಿತ ವ್ಯಕ್ತಿಯೊಂದಿಗೆ ಅಸುರಕ್ಷಿತವಾಗಿ ಲೈಂಗಿಕ ಸಂಪರ್ಕ ಹೊಂದಿದಾಗ ಈ ವೈರಸ್ ಹರಡುತ್ತದೆ. ಸಂವಿಧಾನದ ಅನುಚ್ಛೇದ 21ರ ಪ್ರಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಗೌರವದಿಂದ ಜೀವನ ನಡೆಸುವ ಹಕ್ಕು ಇದೆ. ಅದರಂತೆ ಏಡ್ಸ್ ಪೀಡಿತರಿಗೂ ಸಮಾಜದಲ್ಲಿ ಗೌರವದಿಂದ ಬದುಕುವ ಹಕ್ಕಿದೆ. ಏಡ್ಸ್ ರೋಗಿಗಳಿಗೆ ಉಚಿತ ಕಾನೂನು ನೆರವು ಲಭ್ಯವಿದೆ’ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್ ಪಾಟೀಲ ಮಾತನಾಡಿ, ‘ಸಾಂಕ್ರಾಮಿಕ ರೋಗಗಳು ಸೊಳ್ಳೆ ಕಚ್ಚುವ ಮೂಲಕ ಅಥವಾ ಗಾಳಿಯಿಂದ ಹರಡುತ್ತವೆ. ಆದರೆ, ಏಡ್ಸ್ ರೋಗ ಹಾಗಲ್ಲ. ಬೇಕು ಎಂದು ಬಯಸಿದರೆ ಮಾತ್ರ ಬರುವ ಕಾಯಿಲೆಯಾಗಿದೆ. ರೋಗಕ್ಕೆ ಔಷಧವಿಲ್ಲ. ಹಾಗಾಗಿ, ಏಕಪತ್ನಿ, ಏಕಪತಿವೃತ ಆಚರಿಸುವ ಮೂಲಕ ಏಡ್ಸ್ನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು.
‘ಎಚ್ಐವಿ ಸೋಂಕಿತರಿಗಾಗಿ ಜಿಲ್ಲಾ ಆಸ್ಪತ್ರೆ, ಶಹಾಪುರ, ಸುರಪುರ, ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಟಿಸಿ ಕೇಂದ್ರಗಳಿವೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಆಪ್ತಸಮಾಲೋಚನೆ ಹಾಗೂ ಎಚ್ಐವಿ ಪರೀಕ್ಷೆ ಮಾಡಲಾಗುತ್ತದೆ’ ಎಂದರು.
ಸನ್ಮಾನ: ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದಡಿ ಉತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಾದ ಗುಂಡುರಾವ್ ಶಹಾಪುರ, ಮೊಹಮ್ಮದ್ ಮೌಲಾಲಿ ವಡಗೇರಾ, ಸಂಗಮೇಶ ಶಹಾಪುರ, ವೆಂಕಟಮ್ಮ ಯಾದಗಿರಿ, ಅನಿತಾ ಯಾದಗಿರಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಸಿ.ಎಸ್.ಮಾಲಿಪಾಟೀಲ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಜಿಲ್ಲಾ ಮೇಲ್ವಿಚಾರಕಿ ಆರತಿ ಧನಶ್ರೀ ಇದ್ದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದಾರ ನಿರೂಪಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ ವಂದಿಸಿದರು.
ಏಡ್ಸ್ ದಿನಾಚರಣೆಯ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.