ಯಾದಗಿರಿ: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರದ ಪ್ರಕರಣಗಳು ಕಂಡು ಬಂದಿಲ್ಲ. ಸಾರ್ವಜನಿಕರು ಯಾವುದೇ ಭಯ ಹಾಗೂ ಆತಂಕಕ್ಕೆ ಒಳಪಡದೇ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಹಕ್ಕಿ ಜ್ವರ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಯಾವುದೇ ಪಕ್ಷಿಗಳು ಮರಣ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಕ್ಕಿ ಜ್ವರದ ಲಕ್ಷಣಗಳು ಬಗ್ಗೆ ರೈತರಿಗೆ ತಿಳವಳಿಕೆ ನೀಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
‘ಜಿಲ್ಲೆಯಲ್ಲಿ 2 ಕೋಳಿ ಫಾರ್ಮ್ಗಳಿದ್ದು,ತಲಾ10,000 ಸಾವಿರದಂತೆ ಕೋಳಿಗಳನ್ನು ಸಾಕಲಾಗಿದೆ. ಹಕ್ಕಿ ಜ್ವರದ ಬಗ್ಗೆ ಮುಂಜಾಗ್ರತೆ ವಹಿಸಿ ಜಿಲ್ಲೆಯ ಬೋನಾಳ ಪಕ್ಷಿಧಾಮ ಹಾಗೂ ಕೋಳಿ ಫಾರಂಗಳಿಂದ ಮಾದರಿಗಳನ್ನು ಪರೀಕ್ಷಿಸಲು ಲ್ಯಾಬ್ಗೆ ಕಳುಹಿಸಲಾಗಿದೆ’ ಎಂದು ಪಶು ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದರು.
ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮುಂಜಾಗೃತಾ ಕ್ರಮಗಳನ್ನು ಕ್ರಮಕೈಗೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಕೋಳಿ ಮಾಂಸ ಹಾಗೂ ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸಿದ್ದಲ್ಲಿ ಮನುಷ್ಯರಿಗೆ ಯಾವುದೇ ರೀತಿಯ ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಪಶುಪಾಲನಾ ಇಲಾಖೆ, ಸಾರಿಗೆ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.