ADVERTISEMENT

ಮೂಲಸೌಲಭ್ಯ ಒದಗಿಸಲು ಸೂಚನೆ: ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 16:22 IST
Last Updated 29 ಸೆಪ್ಟೆಂಬರ್ 2021, 16:22 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಕಾರ್ಯದರ್ಶಿ ಮುಹಮ್ಮದ್ ನಝೀರ್ ಇದ್ದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಕಾರ್ಯದರ್ಶಿ ಮುಹಮ್ಮದ್ ನಝೀರ್ ಇದ್ದರು   

ಯಾದಗಿರಿ: ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡುವಂತೆ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಮುಖವಾಗಿ ಉರ್ದು ಶಾಲೆಗಳಲ್ಲಿ ಸೌಲಭ್ಯಗಳು ಹಾಗೂ ಶಿಕ್ಷಕರ ಕೊರತೆಯ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಇದರಿಂದ ಅಲ್ಪಸಂಖ್ಯಾತರಿಗೆ ಶೈಕ್ಷಣಿಕವಾಗಿ ತೊಂದರೆಯಾಗುತ್ತಿರುವ ಬಗ್ಗೆ ಅಹವಾಲುಗಳು ವ್ಯಕ್ತವಾಗುತ್ತಿವೆ. ಕಟ್ಟಡ ನಿರ್ಮಾಣ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಲು ಪ್ರಧಾನಮಂತ್ರಿ ಜನವಿಕಾಸ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಾಕಷ್ಟು ಅನುದಾನ ಇದೆ. ಆದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಬಗ್ಗೆ ತುರ್ತಾಗಿ ಗಮನಹರಿಸಲು ಸೂಚಿಸಿದರು.

ADVERTISEMENT

ಗಂಗಾ ಕಲ್ಯಾಣ ಯೋಜನೆಯಲ್ಲಿ ಬೋರ್ ವೆಲ್ ಕೊರೆತ, ಪಂಪ್ ಅಳವಡಿಕೆ ಹಾಗೂ ವಿದ್ಯುದ್ಧೀಕರಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ವಸತಿ ಯೋಜನೆಯಲ್ಲಿ ಪಲಾನುಭವಿಗಳಿಗೆ ಬ್ಯಾಂಕ್ ಸಾಲವನ್ನು ಆದ್ಯತೆಯಲ್ಲಿ ಮಂಜೂರು ಮಾಡಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ವೃತ್ತಿಪರ ಶಿಕ್ಷಣಕ್ಕೆ ಯಾದಗಿರಿಯಲ್ಲಿ ಐಟಿಐ ಸ್ಥಾಪಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವಕ್ಫ್ ಇಲಾಖೆಯ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ವಕ್ಫ್ ಆಸ್ತಿಗಳ ಒತ್ತುವರಿ ತಡೆಗೆ ಗಮನಹರಿಸಲು ತಿಳಿಸಿದರು. ವಕ್ಫ್ ಭೂಮಿಗಳ ಸುತ್ತಲೂ ಕಾಂಪೌಂಡ್ ನಿರ್ಮಿಸಿ, ಅಲ್ಲಿ ಮರಗಳನ್ನು ನೆಡಲು ಯೋಜನೆ ರೂಪಿಸಲು ಅಜೀಂ ತಿಳಿಸಿದರು.

ಆಯೋಗದ ಕಾರ್ಯದರ್ಶಿ ಮುಹಮ್ಮದ್ ನಝೀರ್ ಅವರು ವಿವಿಧ ಇಲಾಖೆಗಳಲ್ಲಿ 15 ಅಂಶಗಳ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ರಾಜು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.