ADVERTISEMENT

ರಸ್ತೆಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ

ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 15:04 IST
Last Updated 14 ಮಾರ್ಚ್ 2019, 15:04 IST
ಯಾದಗಿರಿಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿದರು
ಯಾದಗಿರಿಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿದರು   

ಯಾದಗಿರಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಸೂಚನಾ ಫಲಕಗಳು, ಅವಶ್ಯವಿರುವ ಕಡೆ ಸಿಗ್ನಲ್, ಝಿಬ್ರಾ ಕ್ರಾಸಿಂಗ್, ರಿಪ್ಲೆಕ್ಟರ್‌ಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿ ನಂತರ ರಸ್ತೆ ನಿಯಮ ಪಾಲಿಸುವಂತೆ ನಾಗರಿಕರಿಗೆ ತಾಕೀತು ಮಾಡಿ. ನಂತರ ನಿಯಮ ಪಾಲಿಸುವಂತೆ ಸವಾರರಿಗೆ ಹೇಳಬೇಕು’ ಎಂದರು.

ADVERTISEMENT

‘ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ನಗರದಲ್ಲಿ ಅವೈಜ್ಞಾನಿಕ ಪಾರ್ಕಿಂಗ್ ಹೆಚ್ಚಿದೆ. ಟ್ರಾಫಿಕ್ ಸಿಗ್ನಲ್, ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ರಸ್ತೆ ಉಬ್ಬುಗಳನ್ನು ನಿರ್ಮಿಸಬೇಕು’ ಎಂದೂ ಸಲಹೆ ನೀಡಿದರು.

‘ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ₹3 ಲಕ್ಷ ಅನುದಾನ ಲಭ್ಯವಿದೆ. ಅದನ್ನು ಮಾರ್ಚ್ 31ರೊಳಗೆ ಸದುಪಯೋಗ ಪಡಿಸಿಕೊಳ್ಳಬೇಕು. ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಇನ್ನು ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ವಿಧಿಸಿ, ರಶೀದಿ ನೀಡಬೇಕು. ನಾಲ್ಕು ಚಕ್ರದ ವಾಹನಗಳ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುವ ಮತ್ತು ರಸ್ತೆ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

‘ರಸ್ತೆ ಸಾರಿಗೆ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಾಗ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಲ್ಲಿ ಸಮಿತಿಯ ಯಾವ ಸದಸ್ಯರ ಪಾತ್ರ ಏನು ಎಂಬುದನ್ನು ನಡಾವಳಿಯಲ್ಲಿ ತಿಳಿಸಬೇಕು. ಅದರಂತೆ ಸಮಿತಿಯ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸಬೇಕು. ಇಲಾಖೆಗಳ ಮಧ್ಯೆ ಸಮನ್ವಯತೆ ಇರಬೇಕು’ ಎಂದು ಕಿವಿಮಾತು ಹೇಳಿದರು.

ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವಾಹನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ಶಾಲೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ರಿಷಿಕೇಶ ಭಗವಾನ್ ಮಾತನಾಡಿ,‘ಬಿಡಾಡಿ ದನಗಳನ್ನು ರಸ್ತೆಗೆ ಬಿಡುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಬೈಕ್ ಸವಾರರು ಬಿದ್ದು ಪೆಟ್ಟು ಮಾಡಿಕೊಳ್ಳುತ್ತಾರೆ. ಅಲ್ಲದೆ, ಸಂಚಾರ ದಟ್ಟಣೆ ಉಂಟಾಗುತ್ತದೆ. ಕಾರಣ ದನಗಳನ್ನು ರಸ್ತೆಗೆ ಬಿಡದಂತೆ ಅವುಗಳ ಮಾಲೀಕರಿಗೆ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಬೇಕು. ರಸ್ತೆಗೆ ಬಿಟ್ಟಲ್ಲಿ ವಶಪಡಿಸಿಕೊಂಡು ಯಾದಗಿರಿಯ ಹನುಮಾನ ಗೋಶಾಲೆ ಅಥವಾ ಶಹಾಪುರದ ವಿಶ್ವ ಗೋಮಾತಾ ಗುರುಕುಲ ಗೋಶಾಲೆಗಳಿಗೆ ಸಾಗಿಸಬೇಕು. ಬಿಡಾಡಿದನಗಳ ಮಾಲೀಕರು ಬಿಡಿಸಿಕೊಂಡು ಹೋಗಲು ಬಂದಾಗ ದಂಡ ವಿಧಿಸಬೇಕು’ ಎಂದು ತಿಳಿಸಿದರು.

‘ಒಂದೇ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್, ಸೂಚನಾ ಫಲಕ ಹಾಗೂ ರೋಡ್ ಮಾರ್ಕಿಂಗ್ ಕುರಿತು ಆರ್‌ಟಿಒ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ವತಿಯಿಂದ ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಿದ್ಧಪಡಿಸಲಾಗಿದೆ’ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ ಅವರು ಸಭೆಯ ಗಮನಕ್ಕೆ ತಂದರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿಮಾತನಾಡಿ,‘ಸೈದಾಪುರ ಬಸ್ ನಿಲ್ದಾಣದ ಆವರಣ ಗೋಡೆಗೆ ಹೊಂದಿಕೊಂಡು ಪಾನ್‌ಶಾಪ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸುರಪುರ ಬಸ್ ನಿಲ್ದಾಣದ ಬಳಿ ಒನ್‌ವೇ ಜಾರಿಗೆ ತರಬೇಕು’ ಎಂದು ಕೋರಿದರು.

2019ನೇ ಸಾಲಿನ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಯ ಕರಡನ್ನು ಸಭೆಯಲ್ಲಿ ಮಂಡಿಸಲಾಯಿತು.

ಡಿವೈಎಸ್‌ಪಿ ಯು.ಶರಣಪ್ಪ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಿ.ಬಿ.ಚಂದ್ರಶೇಖರ, ಶಹಾಪುರ ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ಸರ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್ ನಾಗರಾಜ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಬಸಪ್ಪ ಮೆಕಾಲೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉಪ ವಿಭಾಗದ ಎಇಇ ಸಿದ್ದಲಿಂಗಪ್ಪ ಐರೆಡ್ಡಿ, ಜೆಸ್ಕಾಂನ ಎಇಇ ವಿಶ್ವನಾಥರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.