ಯಾದಗಿರಿ: ‘ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ ನಮ್ಮ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕರ ಸ್ಥಾನ ಸಿಕ್ಕಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರು ಸಂತಸ ವ್ಯಕ್ತಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆಯಾಗುತ್ತಿದಂತೆ ಶುಕ್ರವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ನಡೆದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಡಾ. ಖರ್ಗೆ ಅವರು, ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಅವರು ರಾಜ್ಯ ಮತ್ತು ಕೆಂದ್ರ ಸಚಿವರಾಗಿ ಇಡೀ ದೇಶ ತಿರುಗಿ ನೋಡುವಂತೆ ಅಭಿವೃದ್ಧಿಗೊಳಿಸಿದ್ದಾರೆ’ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ಮಾತನಾಡಿ, ‘ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕಕ್ಕೆ ಕಲಂ 371 (ಜೆ), ವಿಭಾಗೀಯ ಕಚೇರಿ, ಇಎಸ್ಐ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳು ಜಾರಿಗೊಳಿಸಿದ್ದಾರೆ’ ಎಂದರು.
ಈ ವೇಳೆ ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ನಾಯಕ, ಕೆಪಿಸಿಸಿ ವೀಕ್ಷಕ ರಾಘವೇಂದ್ರ ಮಾನಸಗಲ್, ಅಬ್ದುಲ್ ರಜಾಕ್, ಮಂಜುಳಾ ಗೂಳಿ, ಬಾಷುಮೀಯಾ ವಡಗೇರಿ, ಮರೆಪ್ಪ ಬಿಳ್ಹಾರ, ಶ್ಯಾಮಸನ್ ಮಾಳಿಕೇರಿ, ಗಣೇಶ ದುಪ್ಪಲ್ಲಿ, ಚನ್ನಕೇಶವ ಬಾಣತಿಹಾಳ, ಅಭಿಷೇಕ ದಾಸನಕೇರಿ, ಕೃಷ್ಣ, ರಾಜಕುಮಾರ ಗಣೇರ್, ಹಣಮಂತ್ರಾಯಗೌಡ ತೇಕರಾಳ ಸೇರಿದಂತೆ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.