ಯಾದಗಿರಿ: ಸಂಘಟನೆ ಬೆಳೆಸಬೇಕಾದರೆ ನೌಕರರಲ್ಲಿ ಸಮಾನ ಮನಸ್ಥಿತಿ ಇರಬೇಕು. ಸಂಘಟನೆ ಏನು ಕೊಟ್ಟಿದೆ ಅನ್ನುವುದಕ್ಕಿಂತ ಸಂಘಟನೆಗೆ ನಾನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯದ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಯಾದಗಿರಿ, ರಾಜ್ಯ ಸಂಘದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ನೌಕರರ ಸಮಸ್ಯೆಗಳ ಕುರಿತು ಸಂವಾದ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.
ನೌಕರರ ಎನ್.ಪಿ.ಸಿ.ರದ್ದುಪಡಿಸಬೇಕೆಂಬ ನಮ್ಮ ಉದ್ದೇಶವಾಗಿದೆ. ಕೇಂದ್ರ ಸರ್ಕಾರದ ಮಾದರಿಯಂತೆ ನಮ್ಮ ವೇತನವನ್ನು 2022ನೇ ಇಸ್ವಿಯಲ್ಲಿ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರಿ ಪ್ರತಿ ತಮ್ಮ ಕಚೇರಿ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನೌಕರರ ಸಮಸ್ಯೆಗಳು ಸಾಕಷ್ಟಿದ್ದು, ಎಲ್ಲರೂ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಹೋರಾಟ ಮಾಡಿದರೆ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ಈಗಾಗಲೇ ನಮಗೆ ಹೊಸ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ₹1.50 ಕೋಟಿ ಕ್ರೀಡಾಕೂಟಗಳಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿರುವ ನೌಕರರ ಸಮಸ್ಯೆಗಳು ಏನಾದರೂ ಇದ್ದರೆ ಸಂಘದ ಅಧ್ಯಕ್ಷರು ಅಥವಾ ಕಾರ್ಯದರ್ಶಿಗೆ ಭೇಟಿಯಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದ ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ ಮತ್ತು ಕಲಬುರ್ಗಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಮಾತನಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಮಾಲಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಗೌರವ ಅಧ್ಯಕ್ಷ ಪರಮರಡ್ಡಿ ಕಂದಕೂರ, ಕೋಶಾಧ್ಯಕ್ಷ ಯಾಮರೆಡ್ಡಿ, ಕಾರ್ಯಾಧ್ಯಕ್ಷ ಆರ್.ಎಂ.ನಾಟೇಕಾರ, ಪ್ರಧಾನ ಕಾರ್ಯದರ್ಶಿ ಬಿ.ಸಾಬರೆಡ್ಡಿ, ಹಿರಿಯ ಉಪಾಧ್ಯಕ್ಷ ರಾಚಣ್ಣಗೌಡ, ಬಸವರಾಜ ಕೆರೂಟಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.