ಸೈದಾಪುರ: ಕಲ್ಯಾಣ ಕರ್ನಾಟಕದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯನ್ನು ಒಳಗೊಂಡು ಹೊಸದಾಗಿ ಪ್ರಾರಂಭಗೊಂಡ ರಾಯಚೂರು ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಸಿಬ್ಬಂದಿ ನೇಮಕ ಅನುಮತಿ ಮತ್ತು ಅನುದಾನವನ್ನು ಒದಗಿಸಬೇಕು ಎಂದು ಶುಕ್ರವಾರದ ವಿಧಾನ ಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ತಳವಾರ ಸಾಬಣ್ಣ ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅತಿ ಹಿಂದೂಳಿದ ಎರಡು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೊಸ್ಕರ 2020-21ನೇ ಶೈಕ್ಷಣಿಕ ವರ್ಷದಿಂದ ರಾಯಚೂರು ವಿಶ್ವವಿದ್ಯಾಲಯವು ಕಾರ್ಯಾಂಭವಾಗಿದೆ. ಆದರೆ ಇಲ್ಲಿಯವರೆಗೂ ಯಾವುದೇ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸರ್ಕಾರದಿಂದ ಅನುಮೋದನೆ ಅಥವಾ ಮಂಜೂರು ಆಗಿರುವುದಿಲ್ಲ. ಈಗಾಗಲೇ ವಿಶ್ವವಿದ್ಯಾಲಯದಿಂದ ಅವಶ್ಯಕವಿರುವ 175 ಬೋಧಕ ಹಾಗೂ 173 ಬೋಧಕೇತರ ಹುದ್ದೆಗಳನ್ನು ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲ್ಲಿ ಒಟ್ಟು 25 ಸ್ನಾತಕೋತ್ತರ ಕೋರ್ಸ್ಗಳ ಅಧ್ಯಯನ ವಿಭಾಗಗಳಲ್ಲಿ ವಿಧ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಆದರೆ ಕೊನೆ ಪಕ್ಷ ಅತಿಥಿ ಉಪನ್ಯಾಸಕರಿಗೆ ನೇಮಿಸಲು ಪ್ರತ್ಯೇಕ ಅನುದಾನವನ್ನು ಮಂಜೂರು ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದ್ದರಿಂದ ಕೇಂದ್ರ ಸರ್ಕಾರದಿಂದ ಘೋಷಣೆಯಾದ ಮಹತ್ವಾಕಾಂಕ್ಷೆಯ ಜಿಲ್ಲೆಗಳಾದ ರಾಯಚೂರು- ಯಾದಗಿರಿ ಜಿಲ್ಲೆಗಳಿಗೊಸ್ಕರ ಪ್ರಾರಂಭಗೊಂಡ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಸಿಬ್ಬಂದಿ ನೇಮಕಕ್ಕೆ ಅನುಮತಿ ಮತ್ತು ಹೆಚ್ಚಿನ ಅನುದಾನವನ್ನು ಒದಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.