ADVERTISEMENT

ಪ್ರದಾನ ಮಂತ್ರಿ ಮಾತೃವಂದನಾ ಯೋಜನೆ: ರಾಜ್ಯದಲ್ಲೇ ಯಾದಗಿರಿ ಜಿಲ್ಲೆ ಪ್ರಥಮ ಸ್ಥಾನ

ರಾಷ್ಟ್ರೀಯ ಪೋಷಣ್ ಮಾಸಾಚಾರಣೆ, ಮಾತೃವಂದನಾ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 4:40 IST
Last Updated 3 ಸೆಪ್ಟೆಂಬರ್ 2021, 4:40 IST
ಯಾದಗಿರಿಯಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚಾರಣೆ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಯಾದಗಿರಿಯಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚಾರಣೆ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಯಾದಗಿರಿ: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಗತಿಯಲ್ಲಿ ರಾಜ್ಯದಲ್ಲೇ ಯಾದಗಿರಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಕಚೇರಿಯ ಸಭಾಂಗಣ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ ರಾಷ್ಟ್ರೀಯ ಪೋಷಣ್ ಮಾಸಾಚಾರಣೆ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮದ ಭಿತ್ತಿ ಪತ್ರ ಬಿಡುಗಡೆ ಮಾಡಿ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಷ್ಟ್ರೀಯ ಪೋಷಣಾ ಮಾಸಚಾರಣೆ ಕೇಂದ್ರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಅಪೌಷ್ಟಿಕತೆ ಮಕ್ಕಳನ್ನು ಪೋಷಣೆ ಮಾಡುವುದು ಇದರ ಮುಖ್ಯ ಉದ್ದೇಶ. ಜಿಲ್ಲೆಯ ಎಲ್ಲ ಪಂಚಾಯಿತಿ ಮಟ್ಟದಲ್ಲಿ ಮಾಡುತ್ತಿದ್ದು, ಗ್ರಾಮ ಮಟ್ಟದಲ್ಲಿನ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅವರಿಗೆ ಸರಿಯಾದ ಚಿಕಿತ್ಸೆ ನೀಡುವುದಾಗಿದೆ. ಅವರನ್ನು ಪೌಷ್ಟಿಕಯುಕ್ತರನ್ನಾಗಿ ಮಾಡುವ ಗುರಿ ಸಾಧಿಸಲು ಎಲ್ಲರೂ ಸಹಕರಿಸಬೇಕು ಎಂದರು.

ADVERTISEMENT

ಹೆಣ್ಣು ಮಕ್ಕಳು ನಂತರ ಋತುಮತಿಯಾದ ಬಳಿಕ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ನಿರ್ಲಕ್ಷಿಸಿದರೆ ಅವರು ರಕ್ತ ಹೀನತೆಗೆ ತುತ್ತಾಗಬಹುದು. ಅದನ್ನು ತಡೆಗಟ್ಟಲು ಪೌಷ್ಟಿಕ ಆಹಾರದ ಬಗ್ಗೆ ತಿಳಿದುಕೊಳ್ಳುವುದು ಅನಿವಾರ್ಯ. ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ಕಡ್ಡಾಯವಾಗಿ ಗರ್ಭಿಣಿಯರು ಸೇವಿಸಬೇಕು. ಮಗುವಿನ ಆರೈಕೆ ಮತ್ತು ಆಹಾರ ಸೇವನೆ ಮಾಡಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗರ್ಭಿಣಿಯರು ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಅನುಕೂಲವಾಗುತ್ತದೆ ಎಂ ದರು.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯು ಮೊದಲ ಗರ್ಭಿಣಿ, ಬಾಣಂತಿಯರಿಗೆ ₹5,000 ಸಹಾಯಧನ ನೀಡಲಾಗುತ್ತದೆ. 3 ಕಂತುಗಳಲ್ಲಿ ನೇರ ನಗದು ವರ್ಗವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾಯಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ್ ಎಸ್.ಕವಿತಾಳ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕ ಯಲ್ಲಪ್ಪ ಕೆ, ಪೋಷಣ್‌ ಅಭಿಯಾನ್ ಯೋಜನೆಯ ಜಿಲ್ಲಾ ಸಂಯೋಜಕ ಮನಿಷ್‌, ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿಗಳ ಇಒಗಳು, ವೈದ್ಯಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.