ಯಾದಗಿರಿ: 'ಜಿಲ್ಲೆಯಲ್ಲಿ 16ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮವು ಅಕ್ಟೋಬರ್ 14ರಿಂದ ನವೆಂಬರ್ 4ರವರೆಗೆ ನಡೆಯಲಿದೆ. ರೈತರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿರೋಧಕ ಲಸಿಕೆ ಹಾಕಿಸುವ ಮೂಲಕ ಜಾನುವಾರು ಸಂಪತ್ತನ್ನು ರಕ್ಷಿಸಿಕೊಳ್ಳಬೇಕು' ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮನವಿ ಮಾಡಿದರು.
ತಾಲ್ಲೂಕಿನ ಮುದ್ನಾಳ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 16ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮಕ್ಕೆ ಗೋವು ಪೂಜೆ ಮತ್ತು ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
‘ಈ ಕಾರ್ಯಕ್ರಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಯವರು ಪ್ರತಿ ಗ್ರಾಮಗಳಿಗೆ ತೆರಳಿ ರಾಸುಗಳಿಗೆ ಕಾಲುಬಾಯಿ ರೋಗ ನಿರೋಧಕ ಲಸಿಕೆ ಹಾಕುತ್ತಾರೆ. ಜಾನುವಾರು ಹೊಂದಿರುವ ರೈತರು ತಮ್ಮಲ್ಲಿರುವ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸರ್ಕಾರ ಜಾರಿಗೆ ತಂದಿರುವ ಉಚಿತ ಲಸಿಕೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
‘ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಶರಣಭೂಪಾಲರೆಡ್ಡಿ ಮಾತನಾಡಿ, ಈ ಕಾರ್ಯಕ್ರಮ ಜಿಲ್ಲೆಯಾದ್ಯಂತ 22 ದಿನಗಳ ವರೆಗೆ ಜಾರಿಯಲ್ಲಿದ್ದು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ರೈತರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕುತ್ತಾರೆ. ಈ ರೋಗವು ಜಾನುವಾರುಗಳಿಗೆ ಮಾರಕವಾಗಿದ್ದು, ಲಸಿಕೆಯನ್ನು ವರ್ಷಕ್ಕೆ 2 ಬಾರಿ ಹಾಕಿಸಿಕೊಳ್ಳುವ ಮೂಲಕ ರೋಗ ತಡೆಗಟ್ಟಿ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ’ ರೈತರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಭೀಮರೆಡ್ಡಿಗೌಡ ಕೂಡ್ಲೂರ, ಶಾಂತಾಬಾಯಿ ಸುರೇಶ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗೋರಿಬಾಯಿ ನಾನಾ ನಾಯಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಅಧಿಕಾರಿಗಳಾದ ಡಾ.ಜಯಶ್ರೀ, ಡಾ.ಗೀತಾ, ಡಾ.ಶಿವಮಂಗಲಾ, ಡಾ.ಸಂಗೀತಾ, ಕಾಶೀನಾಥ, ಸಂಜೀವರೆಡ್ಡಿ, ಮಹಾದೇವಪ್ಪ, ಸಿದ್ದಾರೆಡ್ಡಿ, ಶಾಂತಮ್ಮ, ಪಾರ್ವತಿ, ಮುಸ್ತಾಕ್, ಶೋಯೆಬ್ ಮತ್ತು ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.