ಯಾದಗಿರಿ: ರಾಮನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪದಾಧಿಕಾರಿಗಳು ನಗರದ ಸುಭಾಷ ವೃತ್ತದಲ್ಲಿ ಸಂಸದ ಡಿ.ಕೆ.ಸುರೇಶ್ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಮಂಗಳವಾರ ಪ್ರತಿಭಟನೆ ಮಾಡಿದರು.
ಈ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಕೂಗಿದ ಪದಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಅಶ್ವತ್ಥ ನಾರಾಯಣ ಅವರನ್ನು ಸಂಸದ ಡಿ.ಕೆ. ಸುರೇಶ್ ಅವರು ವೇದಿಕೆಯಲ್ಲಿ ಹಲ್ಲೆಗೆ ಮುಂದಾಗಿರುವುದು ಖಂಡನೀಯ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಮುಖಂಡರು ಸೋಲಿನಿಂದ ಕಂಗೆಟ್ಟು, ಹತಾಶೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಗೂಂಡಾ ವರ್ತನೆ ತೋರುತ್ತದೆ. ಗೂಂಡಾಗಿರಿ ಸಂಸ್ಕೃತಿ ಬಿಜೆಪಿಯದ್ದಲ್ಲ ಎಂದರು.
ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ಯುವ ಮುಖಂಡ ಮಹೇಶ್ ರೆಡ್ಡಿ ಮದ್ನಾಳ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ದೇವಿಂದ್ರ ನಾಥ್ ನಾದ್, ನಗರಾಧ್ಯಕ್ಷ ಸುರೇಶ್ ಅಂಬಿಗೇರ್, ಶಿವರಾಜ ದಾಸನಕೇರಿ, ವಿಜಯ ಚಿಂಚನಸೂರ, ವೀಣಾ ಮೋದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.