ಯಾದಗಿರಿ: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಿಕ್ಷಕರನ್ನು ‘ಪದವೀಧರ ಶಿಕ್ಷಕ’ರೆಂದು ಪರಿಗಣಿಸಿ ( ವೃಂದ ಮತ್ತು ನೇಮಕಾತಿ ನಿಯಮ ಬದಲಾಯಿಸಲು) ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮಂಗಳವಾರ ಜಿಲ್ಲಾ ಕ್ರೀಡಾಂಗಣದಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮುಂದುವರಿಸಬೇಕು. ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆಯಾಗದೆ ಇರುವುದರಿಂದ ಈಗ ವರ್ಗಾವಣೆ ಪ್ರಾರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್ನಲ್ಲಿ ಮತ್ತೊಮ್ಮೆ ಕೋರಿಕೆ ವರ್ಗಾವಣೆ ನಡೆಸಬೇಕೆಂದು ಆಗ್ರಹಿಸಿದರು.
ಹೈದರಾಬಾದ್ ಕರ್ನಾಟಕದಲ್ಲಿ 10 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಯಾವುದೇ ನಿರ್ಬಂಧವಿಲ್ಲದೆ ವರ್ಗಾವಣೆ ಮಾಡಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನೂನ್ಯತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ:ವಿದ್ಯಾರ್ಥಿ ಅನುಪಾತ ಗುರುತಿಸುವ ಮುಖ್ಯೋಪಾಧ್ಯಯ, ದೈಹಿಕ ಶಿಕ್ಷಣ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯ ವರೆಗೂ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲ ಸೇವಾ ಸೌಲಭ್ಯ ನೀಡಬೇಕು ಒತ್ತಾಯಿಸಿದರು.
ವರ್ಗಾವಣೆಯಲ್ಲಿ ಶೇಕಡ 20ರಷ್ಟು ಕೈಬಿಡಬೇಕು. ಕಡ್ಡಾಯ ವರ್ಗಾವಣೆ, ಎಸ್ಎಸ್ಎ ಶಿಕ್ಷಕರಿಗೆ ಸಾಮಾನ್ಯ ಅನುದಾನ ಅಡಿ ಸೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಎನ್ಪಿಎಸ್ ಸಂಘದ ಪದಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.