ADVERTISEMENT

‘ಬಿತ್ತನೆಬೀಜ, ರಸಗೊಬ್ಬರ ಪೂರೈಸಿ’- ರಾಜಾ ವೆಂಕಟಪ್ಪನಾಯಕ

ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಮೇ 2021, 3:03 IST
Last Updated 30 ಮೇ 2021, 3:03 IST
ರಾಜಾ ವೆಂಕಟಪ್ಪ ನಾಯಕ
ರಾಜಾ ವೆಂಕಟಪ್ಪ ನಾಯಕ   

ಸುರಪುರ: ‘ಮುಂಗಾರು ಹಂಗಾಮಿಗೆ ಸರ್ಕಾರ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸಬೇಕು’ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಸರ್ಕರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತಂತೆ ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಬೀಜ, ರಸಗೊಬ್ಬರ ಖರೀದಿಗೆ ನಗರ ಪ್ರದೇಶಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಲಾಕ್‍ಡೌನ್ ಕಾರಣದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿ ವರ್ಗ ನಿಯಮ ಪಾಲಿಸುವ ನೆಪದಲ್ಲಿ ರೈತರಿಗೆ ತೊಂದರೆ ನೀಡುತ್ತಿದ್ದಾರೆ. ಈ ಕುರಿತಂತೆ ಅಧಿಕಾರಿಗಳು ಗಮನಹರಿಸಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು’ ಎಂದು ತಿಳಿಸಿದ್ದಾರೆ.

‘ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಮಾರಾಟಕ್ಕೆ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಹಿಂಗಾರು ಹಂಗಾಮಿನಲ್ಲಿ ಭತ್ತ ಬೆಳೆದು ರೈತರು ಭತ್ತ ಮಾರಾಟ ವಾಗದೆ ಸಂಕಷ್ಟದಲ್ಲಿದ್ದಾರೆ. ಈಗಂತೂ ಭತ್ತದ ಬೆಲೆ ನೆಲಕಚ್ಚಿ ಹೋಗಿದೆ. ಸರ್ಕಾರ ಕೂಡಲೇ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿ, ಕ್ಷೇತ್ರದಲ್ಲಿ ವಲಯವಾರು ಭತ್ತ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ಕ್ಷೇತ್ರದ ಜನರು ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊ ಳ್ಳಬೇಕು. ಅನಗತ್ಯವಾಗಿ ಓಡಾಡಬಾರದು. ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಿ, ಸುರಕ್ಷಿತ ಅಂತರ ಪಾಲಿಸಬೇಕು. ಪ್ರತಿಯೊಬ್ಬರು ತಪ್ಪದೆ ಕೋವಿಡ್ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು’ ಎಂದು ಅವರು ಜನರಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.