ADVERTISEMENT

ಯಾದಗಿರಿ: 27ರಂದು ಲೋಕಸೇವಾ ಆಯೋಗದ ಪರೀಕ್ಷೆ

ಪಾರದರ್ಶಕ, ನ್ಯಾಯಸಮ್ಮತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಎಡಿಸಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 15:18 IST
Last Updated 24 ಆಗಸ್ಟ್ 2024, 15:18 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯ ಕುರಿತ ಸಭೆ ನಡೆಯಿತು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯ ಕುರಿತ ಸಭೆ ನಡೆಯಿತು   

ಯಾದಗಿರಿ: ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯ ಕುರಿತ ಸಭೆಯಲ್ಲಿ  ಅವರು ಮಾತನಾಡಿದರು.

ಯಾದಗಿರಿ ನಗರದ ಪದವಿ ಕಾಲೇಜು, ಸರ್ಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗ, ಸರ್ಕಾರಿ ಮಹಿಳಾ ಪಿಯು ಮತ್ತು ಬಾಲಕರ ಪಿಯು ಕಾಲೇಜು (ಸ್ವಪ್ನಾ ಗ್ರೌಂಡ್), ಆದರ್ಶ ಮಹಾವಿದ್ಯಾಲಯದ ಒಟ್ಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 1,542 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ADVERTISEMENT

2023ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳು ಆ.27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಪತ್ರಿಕೆ- 2 ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಮುಖ್ಯ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯೋಗವು ನೀಡಿರುವ ಮಾರ್ಗಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ತಪಾಸಣಾ ಸಿಬ್ಬಂದಿ ಮೊದಲ ಹಂತದಲ್ಲಿ ಮುಖ್ಯಗೇಟ್ ಬಳಿಯೇ ನಿಲ್ಲಿಸಿ ತಪಾಸಣೆ ಮಾಡಿದ ನಂತರವೇ ಒಳಗೆ ಬಿಡಬೇಕು. ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ಎಲ್ಲಾ ಅಭ್ಯರ್ಥಿಗಳ ಗುರುತಿನ ಚೀಟಿ, ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ, ಅಭ್ಯರ್ಥಿತ್ವದ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿಸಬೇಕು ಎಂದರು.

ಪರೀಕ್ಷಾ ಕೊಠಡಿಗಳಲ್ಲಿನ ಸಿಸಿಟಿವಿ ಕ್ಯಾಮೆರಾ ಪರೀಕ್ಷಾ ಪ್ರಕ್ರಿಯೆ, ಅಭ್ಯರ್ಥಿಗಳ ಹಾಗೂ ಸಂವೀಕ್ಷಕರ ಚಲನವಲನ, ಮುಖಚಹರೆಗಳನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಅಳವಡಿಸಲು ಸೂಕ್ತ ಕ್ರಮ ವಹಿಸಬೇಕು. ಪರೀಕ್ಷಾ ಉಪಕೇಂದ್ರಗಳಿಗೆ ಜಾಮರ್ ಅಳವಡಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಲೈಟ್ ಹಾಗೂ ಫ್ಯಾನ್ ವ್ಯವಸ್ಥೆ, ಕುಡಿಯುವ ನೀರು, ಗಡಿಯಾರದ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಬೇಕು. ಮಾರ್ಗಾಧಿಕಾರಿಗಳೂ ಪರೀಕ್ಷಾ ಪೂರ್ವ ದಿನದಂದು ಉಪಕೇಂದ್ರಗಳಿಗೆ ಭೇಟಿ ನೀಡಿ, ಪರೀಶಿಲಿಸಿ ವರದಿ ಮಾಡಬೇಕು ಎಂದರು.

ಜಿಲ್ಲಾ ತ್ರಿಸದಸ್ಯರ ಸಮಿತಿಯ ಉಸ್ತುವಾರಿಯಲ್ಲಿ ಪರೀಕ್ಷೆಗೆ ಸಂಬಂಧಪಟ್ಟ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯ ಸುಪರ್ದಿಯಲ್ಲಿಡಬೇಕು. ಪರೀಕ್ಷಾ ದಿನದಂದು ಸೂಕ್ತ ಬಂದೋಬಸ್ತ್‌ನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ರವಾನಿಸಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಮಂಜುನಾಥ, ತಹಶೀಲ್ದಾರ್‌ ಸುರೇಶ ಅಂಕಲಗಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ವಿಷಯ ಪರಿವೀಕ್ಷಕ ಬಸನಗೌಡ ಆಲ್ದಾಳ, ಹಣಮಂತ ಎಚ್., ಪ್ರಾಂಶುಪಾಲ ನಿರ್ಮಲಾ, ರುದ್ರಗೌಡ, ದೇವಿಂದ್ರಪ್ಪ, ಶರಣಬಸಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.