ಯಾದಗಿರಿ: ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಶಹಾಪುರ ನಗರದಲ್ಲಿತಗ್ಗು ಪ್ರದೇಶದ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಎಂಟು ಮನೆಗಳು ಭಾಗಶಃ ಕುಸಿದಿವೆ. 300 ಮಿಲಿಮೀಟರ್ ಮಳೆಯಾಗಿದೆ ಎಂದು ತಹಶೀಲ್ದಾರ್ ಜಗನಾಥರಡ್ಡಿ ತಿಳಿಸಿದ್ದಾರೆ.
ಜನಜೀವನ ಅಸ್ತವ್ಯಸ್ತ: ಮಳೆಯ ಅರ್ಭಟಕ್ಕೆ ಶಹಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. 15 ಕಿ.ಮೀ ವ್ಯಾಪ್ತಿಯಲ್ಲಿ ದಾಖಲೆಯ 300 ಎಂ.ಎಂ. ಮಳೆಯಾಗಿದೆ. ಇದು ಹಿಂದೆಂದೂ ಆಗಿರಲಿಲ್ಲ. ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿದ್ದು ರೋಗಿಗಳು ಪರದಾಡುವಂತಾಗಿದೆ.ನಾಗರಕೆರೆ ಹಾಗೂ ಮಾವಿನಕೆರೆಗಳು ಭರ್ತಿಯಾಗಿವೆ. ಘಿಸಾಡಿ ಸಮುದಾಯದ ಕುಟುಂಬವನ್ನು ರಕ್ಷಿಸಿ ನಿರಾಶ್ರಿತ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನೀರು ಸಂಗ್ರಹವಾಗಿ ರಸ್ತೆ ಮೇಲೆ ನೀರು ಹರಿದ ಪರಿಣಾಮ ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.ಗ್ರಾಮೀಣ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ಹೊಲ, ಗದ್ದೆಯಲ್ಲಿ ನೀರು ಸಂಗ್ರಹವಾಗಿದೆ.
ಯಾದಗಿರಿ ತಾಲ್ಲೂಕಿನ ಸೈದಾಪುರದಲ್ಲಿ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಸಮೀಪದ ಸಂಗ್ವಾರ-ಗೊಂದಡಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಸೇತುವೆ ಸಂಪೂರ್ಣವಾಗಿ ಮಳೆಗೆ ಕೊಚ್ಚಿಹೋಗಿದೆ. ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ವಾಸವಿದ್ದ 75 ವರ್ಷದ ಲಕ್ಷ್ಮಿಬಾಯಿ ನಾಮದೇವ ಚವ್ಹಾಣ ಅವರ ಮನೆಗೆ ನೀರು ನುಗ್ಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.