ಯಾದಗಿರಿ: ಜಿಲ್ಲೆಯಲ್ಲಿ ಗಣನೀಯ ಸಾಧನೆ ಮಾಡಿದ 33 ಸಾಧಕರಿಗೆ ಈ ಬಾರಿ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಸೇರಿದಂತೆ ಕೋವಿಡ್ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿದ 30 ಜನರನ್ನು ಗುರುತಿಸಿ ಭಾನುವಾರ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರಗಳ ಮೂವರು ಸೇರಿದಂತೆ 33 ಜನರನ್ನು ಗುರುತಿಸಲಾಗಿದೆ.
ಸಂಗೀತ ಕ್ಷೇತ್ರದಲ್ಲಿ ಸುರಪುರ ತಾಲ್ಲೂಕಿನ ಲಕ್ಷ್ಮಿಪುರದ ಚಂದ್ರಹಾಸ ಚೌಡಪ್ಪ ಮಿಠ್ಠಾ, ಸಾಹಿತ್ಯ ಕ್ಷೇತ್ರದಲ್ಲಿ ಹುಣಸಗಿ ತಾಲ್ಲೂಕಿನ ವಿರೇಶ ಹಳ್ಳೂರ, ಕ್ರೀಡಾ ಕ್ಷೇತ್ರದಲ್ಲಿ ಯಾದಗಿರಿ ತಾಲ್ಲೂಕಿನ ದೊಡ್ಡಪ್ಪ ನಾಯಕ ಅವರನ್ನು ಸನ್ಮಾನಿಸಲಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಯ 6 ಜನರು, ಕಂದಾಯ ಇಲಾಖೆ 3, ಜಿಲ್ಲಾ ಪಂಚಾಯಿತಿ ಇಲಾಖೆ 3, ಸಮಾಜ ಕಲ್ಯಾಣ 3, ನಗರಸಭೆ 3, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 3, ಪೊಲೀಸ್ ಇಲಾಖೆ 3, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 3, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂವರನ್ನು ಗೌರವಿಸಲಾಗುತ್ತಿದೆ.
ಕನ್ನಡ ರಾಜ್ಯೋತ್ಸವ ದಿನಾಚರಣೆ ಇಂದು
ಯಾದಗಿರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾವೈಕ್ಯತಾ ಸಮಿತಿ , ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನ.1ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.
ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್. ಚಂಡ್ರಕಿ, ನಗರ ಸಭೆ ಅಧ್ಯಕ್ಷ ವಿಲಾಸ ಪಾಟೀಲ, ತಾ.ಪಂ ಅಧ್ಯಕ್ಷೆ ಭೀಮವ್ವ ಮಲ್ಲೇಶಪ್ಪ ಅಚೋಲ ವಿಶೇಷ ಆಹ್ವಾನಿತರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.