ಯಾದಗಿರಿ: ಅಂಗವಿಕಲರ ಅಭಿವೃದ್ಧಿಗೆ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಶೇ 5 ಅನುದಾನವನ್ನು ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮೀಸಲಿರಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 18 ವರ್ಷ ಪೂರೈಸಿದ ಅಂಗವಿಕಲರಿಗೆ ಜಾಬ್ ಕಾರ್ಡ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಂಗವಿಕಲರ ವಿಶೇಷ ಕುಂದುಕೊರತೆಗಳ ಸಭೆ ನಡೆಸಿ, ಅವರಿಂದ ಸ್ವೀಕೃತವಾದ ಸಮಸ್ಯೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್ಗಳಲ್ಲಿ ಸಮಸ್ಯೆಗಳು ಕಂಡುಬಂದರೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.
ಅಂಗವಿಕಲರಿಗಾಗಿಯೇ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದ್ದು, ಅದನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಅಧಿಕಾರಿಗಳು ಅಂಗವಿಕಲರಿಗೆ ಸಹಕಾರ ನೀಡಬೇಕು. ಅಂಗವಿಕಲರು ಅಸಹಾಯಕರಲ್ಲ, ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಸಹ ಅಂಗವಿಕಲರ ಜತೆ ಗೌರವದಿಂದ ವರ್ತಿಸಬೇಕು. ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಅಂಗವಿಕಲರಿಗೆ ಮೀಸಲಿಟ್ಟ ಆಸನಕ್ಕೆ ಕಡ್ಡಾಯ ಮೀಸಲಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಸ್ನೇಹಿ ಶೌಚಾಲಯ ನಿರ್ಮಿಸಬೇಕು. ಕೃಷಿ ಇಲಾಖೆಯಲ್ಲಿ ಅಂಗವಿಕಲರ ರೈತರಿಗೆ ಮೊದಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಅಂಗವಿಕಲರು ಹಲವು ಬೇಡಿಕೆಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಗೌಡ ಪಾಟೀಲ, ರಾಜ್ಯ ಅಂಗವಿಕಲರ ಹಕ್ಕುಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸಂಗನಗೌಡ ಧನರೆಡ್ಡಿ ರಾಜಕೋಳೂರು, ಜಿಲ್ಲಾ ಅಧ್ಯಕ್ಷ ಬಸವರಾಜ ಬೈರಮಡ್ಡಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಶ್ವನಾಥರೆಡ್ಡಿ ಆರ್, ನಾಗೇಂದ್ರ ದೊರಿ, ಬಾಬು ಜಾನೆ ಶಹಾಪುರ, ರವಿ ಐಕೂರು ವಡಗೇರಾ, ಮಾಳಪ್ಪ ಪೂಜಾರಿ, ರಮೇಶ ಕೂಡ್ಲೂರು, ನಾಗರಾಜ ಶಹಾಪುರ, ಭೀಮರಾಯ ಯಾದಗಿರಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.