ADVERTISEMENT

ಯಾದಗಿರಿ: ವಸತಿ ಶಾಲಾ ವಿದ್ಯಾರ್ಥಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 5:44 IST
Last Updated 10 ಜನವರಿ 2022, 5:44 IST
ಶಹಾಪುರ ಪೊಲೀಸ್ ಠಾಣೆಯ ಮುಂಭಾಗ ಭಾನುವಾರ ಮೃತ ವಿದ್ಯಾರ್ಥಿಯ ಪೋಷಕರು ಸಾವಿನ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು
ಶಹಾಪುರ ಪೊಲೀಸ್ ಠಾಣೆಯ ಮುಂಭಾಗ ಭಾನುವಾರ ಮೃತ ವಿದ್ಯಾರ್ಥಿಯ ಪೋಷಕರು ಸಾವಿನ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು   

ಶಹಾಪುರ: ತಾಲ್ಲೂಕಿನ ಟೋಕಾಪುರ ಗ್ರಾಮದ ಬಳಿಯ ಎಲ್ಲಮ್ಮ ಗುಡ್ಡದ ಸಮೀಪದ ಕಾಲುವೆಯಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.

ನಗರದ ಹೊರವಲಯದ ಮೊರಾರ್ಜಿ ವಸತಿ ನಿಲಯದ ವಿದ್ಯಾರ್ಥಿ ನಿಂಗಪ್ಪ ಮೃತಪಟ್ಟಿದ್ದಾನೆ.ದ್ವಿತೀಯ ಪಿಯು ಓದುತ್ತಿದ್ದು, ಶನಿವಾರ ಗೆಳೆಯರ ಜತೆ ಎಸ್‌ಬಿಸಿ ಕಾಲುವೆಯಲ್ಲಿ ಈಜಲು ಹೋಗಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ.

ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ ಬಳಿಕ ಭಾನುವಾರ ಸಂಜೆ ಶವ ಪತ್ತೆಯಾಯಿತು.

ADVERTISEMENT

ನೀರಿನಿಂದ ಶವ ಹೊರತೆಗೆದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರ ಣೋತ್ತರ ಪರೀಕ್ಷೆ ನಡೆಸಲಾಗುವುದು. ಬಳಿಕ ಕುಟುಂಬದ ಸದಸ್ಯರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಶಹಾಪುರ ಠಾಣೆಯ ಪೊಲೀಸ್ ಇನ್‌ಸ್ಪೆಪೆಕ್ಟರ್ ಶ್ರೀನಿವಾಸ ಅಲ್ಲಾಪುರ ಹಾಗೂ ಪಿಎಸ್ಐ ಚಂದ್ರಕಾಂತ ಮೆಕಾಲೆ ತಿಳಿಸಿದರು.

ಜಿಲ್ಲಾಧಿಕಾರಿ ಸಾಂತ್ವನ: ಮೊರಾರ್ಜಿ ವಸತಿ ನಿಲಯದ ವಿದ್ಯಾರ್ಥಿ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಸುದ್ದಿ ತಿಳಿದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಯ ಪೋಷಕರಿಗೆ ಸಾಂತ್ವನ ಹೇಳಿದರು.

ಮೊರಾರ್ಜಿ ವಸತಿ ನಿಲಯದ ಪ್ರಾಚಾರ್ಯ, ವಾರ್ಡನ್ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ತನಿಖಾ ವರದಿ ನೀಡುವಂತೆ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪ ವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಮಧುರಾಜ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ ಎಸ್.ಎಸ್ ಇದ್ದರು.

ಪೋಷಕರ ಪ್ರತಿಭಟನೆ
ಮೃತ ವಿದ್ಯಾರ್ಥಿಯ ಕುಟುಂಬದ ಸದಸ್ಯರು ನಗರದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

‘ನನ್ನ ಮಗ ಕಾಂಪೌಂಡ್ ಹಾರಿ ಹೋಗುವ ಜಾಯಮಾನದವು ಅಲ್ಲ. ಮಕ್ಕಳ ಪಾಲನೆ ಮಾಡುವುದು ಅಧಿಕಾರಿಗಳು ಕರ್ತವ್ಯ. ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದೆ. ಇದಕ್ಕೆ ಮೂರಾರ್ಜಿ ವಸತಿ ಶಾಲಾ ಅಧಿಕಾರಿಗಳೇ ಹೊಣೆಗಾರರು. ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧಕೂಡಲೇ ದೂರು ದಾಖಲಿಸಬೇಕು’ ಎಂದು ಮೃತ ವಿದ್ಯಾರ್ಥಿಯ ತಂದೆ ಬಸವರಾಜ ಹುಲಕಲ್ ಆಗ್ರಹಿಸಿದರು.

ಪೊಲೀಸ್ ಅಧಿಕಾರಿಗಳ ಭರವಸೆಯ ಮೇಲೆ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯುತ್ತಿದ್ದೆವೆ ಎಂದು ದಲಿತ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಹೊಸ್ಮನಿ, ರಾಹುಲ್ ನಾಟೆಕರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.