ಯಾದಗಿರಿ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ದೇಶದ ವಿವಿಧ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಅಧಿಕಾರಿಗಳ ಮತ್ತು ನೌಕರರ ಸಂಘ ಯಾದಗಿರಿ ವಲಯ ಮುಷ್ಕರಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊಸಳ್ಳಿ ಕ್ರಾಸ್ ಬಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಂಭಾಗ ಸಂಘದ ನೂರಾರು ಜನ ನೌಕರರು ಹಾಗೂ ಸಿಬ್ಬಂದಿ ವರ್ಗ ಮುಷ್ಕರ ಹೂಡಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ಖಂಡಿಸಿದರು. ಬ್ಯಾಂಕ್ಗಳು ಖಾಸಾಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿದರು. 11ನೇ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದು ಮಾಡುವುದು ಇತ್ಯಾದಿ ಬೇಡಿಕೆಗಳನ್ನು ಈಡೇರಿಕೆಗಾಗಿ ಪ್ರತಿಭಟನೆಕಾರರು ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಹಾಗೂ ನೌಕರರ ಸಂಘಗಳ ಯಾದಗಿರಿ ವಲಯದ ಪದಾಧಿಕಾರಿಗಳಾದ ಸತೀಶಕುಮಾರ ಪಟ್ಟಣಶೆಟ್ಟಿ, ಅನಿಲಕುಮಾರ ಕುಲಕರ್ಣಿ, ವರುಣಕುಮಾರ, ಅಶೋಕಕುಮಾರ ಸಾಹು, ಸಿದ್ದಣಗೌಡ ಅಬ್ಬೆತುಮಕೂರ, ನರೇಶಕುಮಾರ ಹಾಗೂ ಜಿಲ್ಲೆಯ ಗ್ರಾಮೀಣ ಬ್ಯಾಂಕಿನ ಸದಸ್ಯರು ಇತರರು ಭಾಗವಹಿಸಿದ್ದರು.
ಜಿಲ್ಲೆಯಾದ್ಯಂತ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಅಧಿಕಾರಿಗಳು ಮತ್ತು ನೌಕರರು, ಸಿಬ್ಬಂದಿ ವರ್ಗ ಬ್ಯಾಂಕ್ಗಳನ್ನು ಬಂದ್ ಮಾಡಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.