ADVERTISEMENT

ಯಾದಗಿರಿ | ‘ಮುಂಬಡ್ತಿ, ನೇಮಕಾತಿಯಲ್ಲಿ ಅನ್ಯಾಯ’

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 6:59 IST
Last Updated 2 ಆಗಸ್ಟ್ 2025, 6:59 IST
ಎಂ. ಕೃಷ್ಣಮೂರ್ತಿ
ಎಂ. ಕೃಷ್ಣಮೂರ್ತಿ   

ಯಾದಗಿರಿ: ‘ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡದವರಿಗೆ (ಎಸ್‌ಟಿ) ಅನ್ಯಾಯ ಮಾಡುತ್ತಿದೆ’ ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎಂ. ಕೃಷ್ಣಮೂರ್ತಿ ಆರೋಪಿಸಿದರು.

‘ಅಧಿಕಾರಕ್ಕಾಗಿ ಕಾಂಗ್ರೆಸ್‌ ನಾಯಕರು ನಾವು ಎಸ್‌ಸಿ ಮತ್ತು ಎಸ್‌ಟಿ ಪರ ಎಂದು ಹೇಳಿಕೊಳ್ಳುತ್ತಾರೆ. ಆದರೆ, ರಾಜ್ಯದ 31 ಜಿಲ್ಲೆಗಳಲ್ಲಿ ಕೇವಲ ಎರಡು ಜಿಲ್ಲೆಗಳಿಗೆ ಮಾತ್ರವೇ ಎಸ್‌ಸಿ, ಎಸ್‌ಟಿ ಸಮುದಾಯದ ಜಿಲ್ಲಾಧಿಕಾರಿಗಳನ್ನು ನಿಯೋಜನೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಯನ್ನು ನಿರ್ವಹಿಸುವ ಸಾಮರ್ಥ್ಯ ಇದ್ದರೂ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ಉನ್ನತ ಹುದ್ದೆಗೆ ಪರಿಗಣಿಸುತ್ತಿಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ರಾಜ್ಯದ ಶಿಕ್ಷಣ, ಗೃಹ, ಅರಣ್ಯ, ತೋಟಗಾರಿಕೆ, ಕೃಷಿ, ನಗರಾಭಿವೃದ್ಧಿ, ಸಾರಿಗೆ, ಇಂಧನ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಮುಂಬಡ್ತಿಗೆ ಅರ್ಹರಾಗಿರುವ ಎಸ್‌ಸಿ, ಎಸ್‌ಟಿ ನೌಕರರಿಗೆ ಸಕಾಲದಲ್ಲಿ ಬಡ್ತಿ ಕೊಡುತ್ತಿಲ್ಲ. ಬಡ್ತಿಯಿಂದ ವಂಚಿತರಾದವರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ’ ಎಂದರು.

ADVERTISEMENT

‘ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ಅನ್ಯಾಯ ಆಗುತ್ತಿದ್ದರೂ ಎಸ್‌ಸಿ, ಎಸ್‌ಟಿ ಮೀಸಲು ಕ್ಷೇತ್ರಗಳಿಂದ ಗೆದ್ದು ಸಚಿವರಾದವರು ಮೌನವಾಗಿದ್ದಾರೆ. ಸಚಿವರಾದ ಡಾ. ಎಚ್‌.ಸಿ. ಮಹದೇವಪ್ಪ, ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಕೆ.ಎಚ್‌. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಕೆ.ಎನ್‌. ರಾಜಣ್ಣ, ಶಿವರಾಜ ತಂಗಡಗಿ, ಆರ್‌.ಬಿ. ತಿಮ್ಮಾಪುರ್ ಅವರು ಮಾತನಾಡುತ್ತಿಲ್ಲ’ ಎಂದು ಹೇಳಿದರು.

‘ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ. ರಾಜ್ಯದಲ್ಲಿ ದಲಿತರಿಗೆ ಅನ್ಯಾಯ ಆಗುತ್ತಿದ್ದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದುಕೊಂಡು ಸಂವಿಧಾನದ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ, ತಮ್ಮದೇ ಪಕ್ಷ ಆಡಳಿತದಲ್ಲಿ ಇರುವ ಕರ್ನಾಟಕದಲ್ಲಿನ ಅನ್ಯಾಯದ ಬಗ್ಗೆ ಬಾಯಿ ಬಿಡುತ್ತಿಲ್ಲ’ ಎಂದರು.

ಬಿಎಸ್‌ಪಿಯ ರಾಜ್ಯ ಉಸ್ತುವಾರಿ ಅತಾರ್ ಸಿಂಗ್ ರಾವ್ ಮಾತನಾಡಿ, ‘ಈ ಹಿಂದೆ ಬೀದರ್‌ನಲ್ಲಿ ನಮ್ಮ ಪಕ್ಷದ ಮುಖಂಡರೊಬ್ಬರು ಗೆದ್ದು ವಿಧಾನ ಸಭೆ ಪ್ರವೇಶಿಸಿದ್ದರು. ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ವಿಧಾನ ಸಭಾ ಕ್ಷೇತ್ರಗಳವಾರ ನಾನಾ ಸಮಿತಿಗಳನ್ನು ರಚನೆ ಮಾಡಲಾಗುವುದು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಗಂಗಾಧರ, ಎಲ್.ಆರ್. ಬೋಸ್ಲೆ, ಬಸವರಾಜ, ಆನಂದ ಮಸ್ಕಿ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.