ಶಹಾಪುರ: ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ಬಜರಂಗದಳ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿದ ಘಟನೆಯು ಭಯೋತ್ಪಾದನೆ ಕೃತ್ಯವಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆಗ್ರಹಿಸಿದರು.
ನಗರದ ಎಸ್ಡಿಪಿಐ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿರುವ ಬಗ್ಗೆ ರಾಜ್ಯ ಗುಪ್ತಚರ ಇಲಾಖೆ ಇಲ್ಲವೆ ಗೃಹ ಇಲಾಖೆಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಅದೇ ಮುಸ್ಲಿಂ ಸಮುದಾಯದವರು ತರಬೇತಿ ನೀಡಿದ್ದರೆ ಮಾಧ್ಯಮದವರು ಪುಂಖಾನುಪುಂಖವಾಗಿ ಚೀರಾಡುತ್ತಿದ್ದರು. ಇಂತಹ ಭಯೋತ್ಪಾದನೆಯ ಕೃತ್ಯಕ್ಕೆ ಕುಮ್ಮಕ್ಕು ನೀಡುವ ಬಜರಂಗದಳವನ್ನು ನಿಷೇಧಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸುಗ್ರಿವಾಜ್ಞೆಯ ಮೂಲಕ ಮತಾಂತರ ಕಾಯ್ದೆ ಜಾರಿಗೆ ತಂದಿರುವುದನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಜನರ ಭಾವನೆಗಳನ್ನು ಬೇರೆಡೆ ಸೆಳೆಯಲು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಇಡೀ ಪೊಲೀಸ್ ಇಲಾಖೆ ಶಾಮೀಲಾಗಿದೆ. ರಾಜ್ಯ ಸಿಐಡಿ ತಂಡವು ದಿಟ್ಟಕ್ರಮ ತೆಗೆದುಕೊಂಡು ಅಕ್ರಮದಲ್ಲಿ ಭಾಗಿಯಾದ ರಾಜಕೀಯ ಮುಖಂಡರನ್ನು ಜೈಲಿಗೆ ಕಳುಹಿಸಬೇಕು. ನಮ್ಮ ನೆಲದ ಕಾನೂನು ಪ್ರತಿಯೊಬ್ಬರು ಪಾಲಿಸಬೇಕು. ಸಂವಿಧಾನದ ನಿರ್ದೇಶವನ್ನು ನಾವೆಲ್ಲರೂ ಚಾಚು ತಪ್ಪದೆ ಪಾಲಿಸಬೇಕು ಎಂದು ಎಂದರು.
ಕೋಮುವಾದಿ ಕ್ರಿಮಿನಲ್ ಆಗಿರುವ ಪ್ರಮೋದ ಮುತಾಲಿಕ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂದೇಟು ಹಾಕಬಾರದು ಎಂದು ಅಬರು ಒತ್ತಾಯಿಸಿದರು.
ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಖಾಲಿದ ಹುಸೇನಿ, ಮುಖಂಡ ಮಹಿಬೂಬ್ ಈ ಸಂದರ್ಭದಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.